
ಉದಯವಾಹಿನಿ ಮಾಲೂರು:- ಇದೆ ತಿಂಗಳ 14 ರ ಒಳಗೆ ಸಮಸ್ಯೆಗಳನ್ನು ಬಗೆಹರಿಸದೆ ಹೋದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಘೇರಾವ್ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲ್ಲೂಕು ಅಧ್ಯಕ್ಷ ಎಚ್.ಜಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ನಮ್ಮ ತಾಲ್ಲೂಕು ಸಮಸ್ಯೆಗಳ ತಾಣವಾಗಿದ್ದು ತಾಲ್ಲೂಕು ಕಚೇರಿಯಲ್ಲಿ ಹಣವಿಲ್ಲದೆ ಯಾವುದೇ ಕೆಲಸಗಳಾಗುತ್ತಿಲ್ಲ, ಉಪ ನೋಂದನಾಧಿಕಾರಿಗಳ ಕಚೇರಿಯಲ್ಲಿ ರೈತರ ಕೆಲಸಗಳಿಗಿಂತ ಮಧ್ಯವರ್ತಿಗಳ ಕೆಲಸಕ್ಕೆ ಪ್ರಾಮುಖ್ಯತೆ, ಇವುಗಳ ಜೊತೆಗೆ ಚೆನ್ನೈ ಕಾರಿಡಾರ್ ರಸ್ತೆ ಕಾಮಗಾರಿ ನಡೆಸುತ್ತಿರುವ ಎನ್.ಎಚ್.ಐ ಅವರು ತಾಲ್ಲೂಕಿನ ಲಕ್ಕೂರು ಹೋಬಳಿಯ ವಿವಿಧ ಕೆರೆಗಳಲ್ಲಿ ಅಲ್ಲಿನ ಪರಿಸರವನ್ನು ಹಾಳು ಮಾಡದೆ, ಕಟ್ಟೆಯಿಂದ 25 ಅಡಿ ದೂರಕ್ಕೆ1.5 ಮೀಟರ್ ಹೂಳು ಮಣ್ಣು ತೆಗೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅನುಮತಿ ಪಡೆದುಕೊಂಡಿದ್ದಾರೆ. ಆದರೆ ನಿಯಮಗಳಿಗೆ ವಿರುದ್ಧವಾಗಿ ಕೆರೆಗಳ ಸುತ್ತಮುತ್ತಲಿನ ಪರಿಸರವನ್ನು ಹಾಳು ಮಾಡಿ ಗಿಡ ಮರಗಳನ್ನು ಕಡಿದು 5 ಮೀಟರ್ ಗೂ ಹೆಚ್ಚು ಆಳ ಮಣ್ಣು ತೆಗೆದಿದ್ದು, ಪ್ರಶ್ನಿಸಿದವರ ಮೇಲೆ ದೌರ್ಜನ್ಯ ಮಾಡುತ್ತಿದ್ದು, ಸಂಬಂಧಪಟ್ಟ ಇಲಾಖೆಗಳಿಗೆ ಈಗಾಗಲೇ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಸಂಬಂಧ 14 ನೇ ತಾರೀಖಿನ ಒಳಗೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮಾಸ್ತಿ ಗ್ರಾಮದಲ್ಲಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರವಿಚಂದ್ರ, ನಾರಾಯಣಸ್ವಾಮಿ ಇದ್ದರು.
