
ಉದಯವಾಹಿನಿ ಚಿತ್ರದುರ್ಗ: ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನವೂ ಆತ್ಮಹತ್ಯೆಗೆ ಪ್ರೇರಣೆಯಾಗಿದ್ದು, ಆತ್ಮಹತ್ಯೆ ತಡೆಗಟ್ಟುವಲ್ಲಿ ಸಮುದಾಯವು ಮಾನಸಿಕ ಖಿನ್ನತೆಯಲ್ಲಿರುವವರು, ಆತ್ಮಹತ್ಯೆಯ ಅಪಾಯದಲ್ಲಿರುವವರನ್ನು ಗುರುತಿಸಿ, ಮಾನಸಿಕ ಚಿಕಿತ್ಸೆ ಸಮಾಲೋಚನೆ ಕೊಡಿಸುವುದರ ಮೂಲಕ ತಡೆಗಟ್ಟಬಹುದು ಎಂದು ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಹೇಳಿದರು.ನಗರದ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮಹತ್ಯೆಗೆ ಪಕ್ಷಪಾತ, ಜಾತಿ, ಜನಾಂಗ, ಲಿಂಗ ಎಂಬುದಿಲ್ಲ. ಎಲ್ಲ ಜನಾಂಗದಲ್ಲೂ ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತವೆ. ಮಾನಸಿಕ ಖಿನ್ನತೆಯಲ್ಲಿರುವವರನ್ನು ಗುರುತಿಸಿ ಚಿಕಿತ್ಸೆ, ಆಪ್ತ ಸಮಾಲೋಚನೆ ಮೂಲಕ ತಡೆಗಟ್ಟಬಹುದೆಂದು ತಿಳಿಸಿದರು.ಆತ್ಮಹತ್ಯೆ ಎಂದರೆ ತನ್ನ ಜೀವನವನ್ನು ಕೊನೆಗೊಳಿಸುವ ಉದ್ದೇಶದಿಂದ ಮಾಡುವ ಕ್ರಿಯೆಗೆ ಆತ್ಮಹತ್ಯೆ ಎಂದು ಕರೆಯುತ್ತಾರೆ. ಆತ್ಮಹತ್ಯೆಯು ದುರಂತ ಮತ್ತು ದುಃಖದ ಸಂಗತಿಯಾಗಿದೆ. 2014ರ ಅಂಕಿ ಅಂಶಗಳ ಪ್ರಕಾರ ನಮ್ಮ ದೇಶದಲ್ಲಿ 1,31,66 ಜನ ಆತ್ಮಹತ್ಯೆಯಿಂದ ತಮ್ಮ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, TELE MANAS Toll free Number 14416 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ ಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.
ಕ್ಲಿನಿಕಲ್ ಸೈಕಾಲಜಿಸ್ಟ್ ಟಿ.ಶ್ರೀಧರ್ ಮಾತನಾಡಿ, ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಪ್ರತಿ ವರ್ಷವೂ ಸೆಪ್ಟೆಂಬರ್ 10ನೇ ತಾರೀಖಿನಂದು ವಿಶ್ವದಾದ್ಯಂತ ಆತ್ಮಹತ್ಯೆಯನ್ನು ತಡೆಗಟ್ಟಲು ಮತ್ತು ಆತ್ಮಹತ್ಯೆ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಪ್ರತಿ ವರ್ಷವೂ ಒಂದು ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ ಎಂದು ತಿಳಿಸಿದ ಅವರು ವಿಶ್ವ ಆತ್ಮಹತ್ಯೆ ದಿನಾಚರಣೆ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಮನೋವೈದ್ಯೆ ಡಾ.ಆರ್.ಮಂಜುನಾಥ್ ಉಪನ್ಯಾಸ ನೀಡಿ, 2023ರ ವಿಶ್ವ ಆತ್ಮ ತಡೆಗಟ್ಟುವ ದಿನಾಚರಣೆಯ ಘೋಷ ವಾಕ್ಯ “ಕ್ರಿಯೆ ಮೂಲಕ ಭರವಸೆಯನ್ನು ಸೃಷ್ಟಿಸುವುದು” ಎಲ್ಲರೂ ಧೈರ್ಯವಾಗಿ ಕಷ್ಟಗಳನ್ನು ಎದುರಿಸಬಹುದು ಎಂದು ಉದಾಹರಣೆ ಮೂಲಕ ತಿಳಿಸಿದರು. ಇದೇ ಸಂದರ್ಭದಲ್ಲಿ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಬಗ್ಗೆ ಜಾಗೃತಿ ಕರಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.
