
ಉದಯವಾಹಿನಿ ಶಿಡ್ಲಘಟ್ಟ: ಮಕ್ಕಳನ್ನು ಆರೋಗ್ಯವಂತರನ್ನಾಗಿ ಕಾಪಾಡುವುದರಲ್ಲಿ ತಾಯಂದಿರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅದು ಅವರ ಜವಾಬ್ದಾರಿಯೂ ಆಗಿದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮಿದೇವಮ್ಮ ಹೇಳಿದರು.ತಾಲ್ಲೂಕಿನ ಬಶೆಟ್ಟಹಳ್ಳಿ ವೃತ್ತದಲ್ಲಿ ಕೋಟಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಿಂದ ಆಯೋಜಿಸಿದ ಪೋಷಣ್ ಅಭಿಯಾನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರು ಗರ್ಭಿಣಿಯರಾದ ಸಂದರ್ಭದಲ್ಲಿ ಪೌಷ್ಟಿಕಾಂಶ ಆಹಾರ ಸೇವನೆ ಅಗತ್ಯವಾಗಿದ್ದು,ಪೌಷ್ಟಿಕಾಂಶ ಆಹಾರ ಸೇವನೆ ಮಾಡದೇ ನಿರ್ಲಕ್ಷ್ಯ ವಹಿಸಿದರೆ, ಹುಟ್ಟುವ ಮಕ್ಕಳ ತೂಕ ಕಡಿಮೆಯಾಗುತ್ತದೆ. ಅಪೌಷ್ಠಿಕತೆಯಿಂದ ಮಕ್ಕಳು ನಲುಗಿ ರಕ್ತಹೀನತೆಯಿಂದ ಬಳಲುವ ಸಾಧ್ಯತೆಯಿದೆ, ತಾಯಂದಿರು ಕೂಡಾ ಹೆರಿಗೆ ಸಮಯದಲ್ಲಿ ತೀವ್ರ ರಕ್ತಸ್ರಾವದಿಂದ ಬಳಲಬೇಕಾಗುತ್ತದೆ ಎಂದರು.ಸಮಾಜದಲ್ಲಿರುವ ಎಲ್ಲಾ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಸರ್ಕಾರದ ಅನೇಕ ಯೋಜನೆಗಳನ್ನು ರೂಪಿಸಿದೆ. ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ ಅಂಗವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ಮಾಡಬೇಕಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್ ಮೂರ್ತಿ ತಿಳಿಸಿದರು.ವಿವಿಧ ಪೌಷ್ಟಿಕಾಂಶವುಳ್ಳ ದವಸ-ಧಾನ್ಯಗಳು ಹಾಗೂ ಸುಂದರವಾಗಿ ಬಿಡಿಸಿದ ರಂಗೋಲಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ನಿವೇದಿತ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಮೇಲ್ವಿಚಾರಕಿ ಶಶಿಕಲಾ ಶಿವಪ್ಪ, ಶಾಲಾ ಮುಖ್ಯೋಪಾಧ್ಯಾಯ ನಾಗರಾಜ್, ಮಕ್ಕಳ ಹಕ್ಕುಗಳ ಟ್ರಸ್ಟ್ ಅಧ್ಯಕ್ಷ ಸತೀಶ್ ಭಾರತಿ, ಆರೋಗ್ಯ ಇಲಾಖೆಯ ಗಾಯಿತ್ರಿ ಸರಸ್ವತಿ ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಗರ್ಭಿಣಿ ಸ್ತ್ರೀಯರು ಗ್ರಾಮದ ಮಹಿಳೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
