ಉದಯವಾಹಿನಿ, ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಮೀಕ್ಷೆ ಆರಂಭಿಸಿರುವುದಾಗಿ ಉಪಮುಖ್ಯಮಂತ್ರಿ ಶಿವಕುಮಾರ್ ಹೇಳಿದರು.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು. ಜಿಲ್ಲೆಗೆ ಮರು ನಾಮಕರಣ ಮಾಡುವುದು ಖಚಿತ ಎಂದ ಅವರು, ವೈಯಕ್ತಿಕ ನೆಲೆಯಲ್ಲಿ ಸಮೀಕ್ಷೆ ಮಾಡುತ್ತಿದ್ದೇನೆ. ಈವರೆಗೆ ಸಮೀಕ್ಷೆಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಮನಗರ ಜಿಲ್ಲೆಗೆ ಮರು ನಾಮಕರಣ ಮಾಡಿದ ನಂತರ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಸ್ಯಾಟಲೈಟ್ ಟೌನ್ಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜಿಸಿದೆ. ‘ನಮ್ಮ ಮೆಟ್ರೊ’ವನ್ನು ಎಲ್ಲ ನಾಲ್ಕು ತಾಲ್ಲೂಕುಗಳಿಗೂ ವಿಸ್ತರಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು. ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಿಗೆ ಕೈಗಾರಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಜಿಲ್ಲೆಯ ಹೆಸರು ಬದಲಿಸಲಾಗುತ್ತಿದೆ ಎಂದು ಅವರು ಹೇಳಿದರು.
