ಉದಯವಾಹಿನಿ, ಬೆಂಗಳೂರು: ಪಿಎಸ್ಐ ಪರೀಕ್ಷೆ ದಿನಾಂಕವನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ದೂರವಾಣಿ ಕರೆ ಅಭಿಯಾನ ನಡೆಸಿದ್ದಾರೆ.ನೂರಾರು ಅಭ್ಯರ್ಥಿಗಳು ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಮೊಬೈಲ್ನಲ್ಲಿ ಮಾತನಾಡಿ, ತಮ್ಮ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದಾರೆ. ಅಭ್ಯರ್ಥಿಗಳ ಮನವಿಗಳನ್ನು ಸಹನೆ ಯಿಂದ ಕೇಳಿದ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ತೆರಳುವಂತೆ ಸಲಹೆ ನೀಡಿದ್ದಾರೆ.
ಅಭ್ಯರ್ಥಿಗಳು ತಾವು ಗೃಹಸಚಿವರ ಬಳಿಗೆ ಹೋಗಿ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅವರ ಜೊತೆ ಮಾತನಾಡುವುದಕ್ಕಿಂತಲೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿಂದೆ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿದ್ದವು. ಈ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ಸದರಿ ಆದೇಶವನ್ನು ಎತ್ತಿಹಿಡಿದು ಇತ್ತೀಚೆಗೆ ತೀರ್ಪು ನೀಡಿದೆ.
