ಉದಯವಾಹಿನಿ, ಬೆಂಗಳೂರು,: ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಇದೇ ೧೩ ರಂದು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾರ್ಗದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರಕ್ಕೆ ಬಾರುಕೋಲಿನ ಚಡಿ ಏಟು ನೀಡಲು ಸಮಾವೇಶ ನಡೆಸುತ್ತಿದ್ದೇವೆ. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ೨೫ ಸಾವಿರ ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ” ಎಂದರು.
ಬರ ನಿರ್ವಹಣೆಯಲ್ಲಿ ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ೧೨೫ ವರ್ಷಗಳ ಬಳಿಕ ಇಷ್ಟೊಂದು ದೊಡ್ಡ ಬರಗಾಲ ಎದುರಾಗಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೆ ಇಲ್ಲಿಯವರೆಗೂ ೧೨೫ ಪೈಸೆಯ ಪರಿಹಾರ ಕೂಡ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೂ ಪರಿಹಾರ ಕೊಟ್ಟಿಲ್ಲ. ಈ ರೀತಿಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ೧೦ ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿರುವುದು ಸರಿಯಲ್ಲ. ರೈತರಿಗೆ ವಿದ್ಯುತ್ ಅಭಾವ ಇದೆ. ಅದನ್ನು ಸಮರ್ಪಕವಾಗಿ ಕೊಡುತ್ತಿಲ್ಲ. ಬರಗಾಲದಲ್ಲಿ ಸರ್ಕಾರ ರೈತರ ಮೇಲೆಯೇ ಬರೆ ಹಾಕಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ. “ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಇಲ್ಲಿಯವರೆಗೂ ಒಂದು ಕಿ.ಮೀ ರಸ್ತೆ ನಿರ್ಮಿಸಲು ಸಾಧ್ಯವಾಗಲಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಎಸ್ಟಿಪಿ, ಟಿಎಸ್ಪಿಯ ೧೧ ಸಾವಿರ ಕೋಟಿ ರೂಪಾಯಿ ಅನುದಾನ ಮರಳಿ ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮರಳಿಸಬೇಕು” ಎಂದು ಹೇಳಿದರು.ಮಾಧ್ಯಮಗೋಷ್ಟಿಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ರಾಜ್ಯ ಬಿಜೆಪಿ ವಕ್ತಾರ ಎಂ ಬಿ ಜೀರಲಿ, ಮುಖಂಡ ರವಿ ಪಾಟೀಲ್ ಸೇರಿ ಮತ್ತಿತರರು ಇದ್ದರು.
