ಉದಯವಾಹಿನಿ, ಬೆಂಗಳೂರು: ಡಿ.೧೭ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರೊಂದಿಗೆ ಚಳಿಗಾಲದಲ್ಲೂ ಕೆಲ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಮಳೆ ಬರುವ ಸೂಚನೆಗಳು ಕಂಡುಬಂದಿವೆ.
ಸದ್ಯ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ರಾಜ್ಯದ ಹಲವೆಡೆ ಮತ್ತೆ ಮಳೆಯಾಗಲಿದೆ.ಇಂದು ಹವಾಮಾನ ಇಲಾಖೆ ಕರ್ನಾಟಕದ ಯಾವುದೇ ಜಿಲ್ಲೆಗೆ ಮಳೆಯ ಮುನ್ಸೂಚನೆ ನೀಡಿಲ್ಲ. ಆದರೆ ಡಿಸೆಂಬರ್ ೧೬ರಿಂದ ಮತ್ತೆ ಮಳೆಯಾಗುವ ಸಂಭವವಿದೆ.
ಡಿಸೆಂಬರ್ ೧೭ ರಿಂದ ಡಿಸೆಂಬರ್ ೧೯ ರವರೆಗೆ ಮೂರು ದಿನಗಳ ಕಾಲ ಕರಾವಳಿಯಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಯಲ್ಲಿ ಮಾತ್ರ ತುಂತುರು ಮಳೆಯಾಗಲಿದೆ. ಡಿಸೆಂಬರ್ ೧೬ ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.ಡಿಸೆಂಬರ್ ೧೭ ರಂದು ದಕ್ಷಿಣ ಒಳನಾಡು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!