ಉದಯವಾಹಿನಿ, ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದವರೆಗೂ ಜೆಡಿಎಸ್ ತಟಸ್ಥ ನಿಲುವನ್ನು ತಳೆಯಲಿದೆ. ಸಂಕ್ರಾಂತಿ ಹಬ್ಬದವರೆಗೂ ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳು ಪಕ್ಷದ ವತಿಯಿಂದ ನಿಗದಿಯಾಗಿಲ್ಲ. ಧನುರ್ಮಾಸ ಆಚರಣೆ ಸಂದರ್ಭದಲ್ಲಿ ಪಕ್ಷದಿಂದ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿಲ್ಲ. ಕೇಂದ್ರಸರ್ಕಾರ ಕೊಬ್ಬರಿಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಅರಸೀಕೆರೆಯಿಂದ ತುಮಕೂರಿನವರೆಗೆ ನಡೆಸಲು ಉದ್ದೇಶಿಸಿದ ಪಾದಯಾತ್ರೆಯನ್ನು ಸದ್ಯಕ್ಕೆ ಕೈಬಿಟ್ಟಂತಾಗಿದೆ. ಈಗಾಗಲೇ ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸ್ರ್ಪಧಿಸಲಿರುವ ಕ್ಷೇತ್ರಗಳ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ, ಬಿಜೆಪಿಯೊಂದಿಗಿನ ಮೈತ್ರಿ, ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷದ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಯನ್ನು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಲೋಕಸಭಾ ಕ್ಷೇತ್ರಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ ನಂತರ ಅಂತಿಮಗೊಳಿಸಲಿದ್ದಾರೆ. ಇತ್ತೀಚೆಗೆ ದೆಹಲಿ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು.
ಆದರೆ, ಕಾರ್ಯದೊತ್ತಡದಿಂದ ಕೇಂದ್ರ ಗೃಹಸಚಿವ ಅಮಿತ್ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದಾರೆ. ಹೀಗಾಗಿ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಚರ್ಚೆ ಮಾಡಲು ಸಮಯಾವಕಾಶ ಸಿಗುತ್ತಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿ ದ್ದಾರೆ. ಅದೇ ಸಂದರ್ಭದಲ್ಲಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಾಧ್ಯತೆಗಳಿವೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ರಿಂದ 5 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ಜೆಡಿಎಸ್ ಆಸಕ್ತಿ ವಹಿಸಿದೆ. ಉಳಿದ ಕ್ಷೇತ್ರಗಳನ್ನು ಮಿತ್ರ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿದೆ.
