ಉದಯವಾಹಿನಿ ,ಕುದೂರು: ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಶಾಸಕರ ಜನಸ್ಪಂದನ ಕಾರ್ಯಕ್ರಮ ಜರುಗಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಎಚ್.ಸಿ. ಬಾಲಕೃಷ್ಣ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇದ್ದರೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗುತ್ತದೆ. ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ಬೇರೆ ಕಡೆ ವರ್ಗಾವಣೆ ಮಾಡಿಸಿಕೊಳ್ಳಿ, ಇಲ್ಲಿರುವವರೆಗೂ ಸರಿಯಾಗಿ ಕಾರ್ಯನಿರ್ವಹಿಸಿ ಎಂದು ತರಾಟೆಗೆ ತೆಗೆದುಕೊಂಡರು.
ಯಾವುದೇ ಮಾಹಿತಿ ತೆಗೆದುಕೊಂಡು ಬರದೇ, ನೆಂಟರ ಮನೆಗೆ ಬಂದಂತೆ ಬರುತ್ತೀರಾ. ಶಾಸಕರ ಜನಸ್ಪಂದನ ಕಾರ್ಯಕ್ರಮದ ದಿನ ಖುದ್ದು ಮುಖ್ಯಮಂತ್ರಿಗಳೇ ಸಭೆ ಕರೆದರೂ ಹೋಗುವಂತಿಲ್ಲ, ತಾಲ್ಲೂಕಿನ ಅಭಿವೃದ್ಧಿ ವಿಚಾರಗಳ ಕಡೆ ಗಮನವಿರಬೇಕು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಕಳೆದ ತಿಂಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಪರಿಹಾರ ಸಿಕ್ಕಿದೆಯಾ ಎಂದು ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿದರು. ಆಗ ಸಂಬಂಧಿಸಿದ ಅರ್ಜಿದಾರರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ಮಾಡುತ್ತಿರುವಾಗ ಅಧಿಕಾರಿಗಳ ಬೇಜವಾಬ್ದಾರಿತನ ಶಾಸಕರ ಗಮನಕ್ಕೆ ಬಂದು ಅಧಿಕಾರಿಗಳ ವಿರುದ್ಧ ಗರಂ ಆದರು. ಜವಾಬ್ದಾರಿಗಳನ್ನ ಅರಿತು ಕೆಲಸ ನಿರ್ವಹಿಸಿದರೆ ಜನಸ್ಪಂದನ ಕಾರ್ಯಕ್ರಮದ ಅವಶ್ಯಕತೆಯೇ ಬರುವುದಿಲ್ಲ. ಇಂತಹ ನಡವಳಿಕೆಯಿಂದಲೇ ಜನರು ಆಡಳಿತದ ಮೇಲೆ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮನೆಗೆ ಕಳುಹಿಸುವುದು ಶತಃಸಿದ್ಧ ಎಂದು ಗುಡುಗಿದರು.
ತಾಲ್ಲೂಕಿನಲ್ಲಿಯೇ ಸಾಕಷ್ಟು ಸಮಸ್ಯೆಗಳಿರುವಾಗ ಇಲ್ಲಿನ ಎಡಿಎಲ್ಆರ್ ಅಧಿಕಾರಿಯನ್ನು ಬೇರೆ ತಾಲ್ಲೂಕಿಗೆ ನಿಯೋಜನೆ ಮಾಡಿರುವ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ನಿಯೋಜನೆ ಮಾಡುವಾಗ ಗಮನಕ್ಕೆ ತರಬೇಕೆಂದು ತಿಳಿಸಿದರು.
