ಉದಯವಾಹಿನಿ,ಸಕಲೇಶಪುರ:  ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಸಣ್ಣ ಕಾಫಿ ಬೆಳೆಗಾರರ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಿ ಹಲವು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜೆಡಿಎಸ್‌ ವರಿಷ್ಠ ಸಂಸದ ಎಚ್‌.ಡಿ. ದೇವೇಗೌಡ ಹೇಳಿದರು.
ಪಟ್ಟಣದಲ್ಲಿ ಗುರುವಾರ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಫಿ ಬೆಳೆಗಾರರ ಒತ್ತುವರಿ ಸೇರಿದಂತೆ ಎಲ್ಲಾ ಸಮಸ್ಯೆಗಳ ಅರಿವು ಇದೆ.
ಎರಡು ವರ್ಷ ರಾಜ್ಯಸಭಾ ಸದಸ್ಯತ್ವ ಇದೆ. ಪ್ರಧಾನಿ ನರೇಂದ್ರ ಮೋದಿ ಜತೆ ಮಾತನಾಡಿ, ಕಾಫಿ ಬೆಳೆಗಾರರ ನೆರವಿಗೆ ಪ್ರಯತ್ನಿಸುತ್ತೇನೆ ಎಂದರು. ವಿಧಾನ ಸಭಾ ಚುನಾವಣೆಯಲ್ಲಿ ಮುಖಂಡ ಎಚ್‌.ಕೆ. ಕುಮಾರಸ್ವಾಮಿ ಸೋತಿದ್ದರಿಂದ ಧೃತಿ ಗೆಡುವುದು ಬೇಡ. ಈ ಸೋಲು ಮುಂದಿನ ಚುನಾವಣೆಯ ಗೆಲುವಿನ ಮೆಟ್ಟಿಲು ಆಗುತ್ತದೆ ಎಂದರು.ಶಾಸಕ ಎಚ್‌.ಡಿ. ರೇವಣ್ಣ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಎಲ್ಲಾ ಗ್ಯಾರಂಟಿಗಳನ್ನು ತೆಗೆದುಹಾಕುತ್ತದೆ. ಮುಸ್ಲಿಂ ಸಮುದಾಯಕ್ಕೆ 1947 ರಿಂದಲೂ ಕಾಂಗ್ರೆಸ್‌ ಪಕ್ಷದ ಟೋಪಿ ಹಾಕುತ್ತಲೇ ಬಂದಿದೆ ಎಂದರು. 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ದೇವೇಗೌಡರು ಆಯ್ಕೆ ಮಾಡುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!