ಉದಯವಾಹಿನಿ, ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ತೃಪ್ತಿದಾಯಕವಾಗದೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿಂದು ಸಭಾತ್ಯಾಗ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳು ಸೇರಿದಂತೆ ರಾಜ್ಯಪಾಲರ ಭಾಷಣವನ್ನು ಬಲವಾಗಿ ಸಮರ್ಥಿಸಿಕೊಂಡು ಉತ್ತರ ನೀಡುತ್ತಿದ್ದರು. ಮುಖ್ಯಮಂತ್ರಿ ನೀಡುವ ಉತ್ತರ ಸಮಂಜಸವಾಗಿಲ್ಲ. ರಾಜ್ಯಪಾಲರ ಭಾಷಣಕ್ಕೆ ಪೂರಕವಾಗಿ ಉತ್ತರ ನೀಡುವ ಬದಲು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು. ಕೆಲವು ಸ್ಪಷ್ಟನೆಗಳನ್ನು ಬಿಜೆಪಿ ಶಾಸಕರು ಕೇಳಿದಾಗ ಅದಕ್ಕೆ ಮುಖ್ಯಮಂತ್ರಿಯವರು ನೀಡಿದ ಉತ್ತರ ಪ್ರತಿಪಕ್ಷ ಸದಸ್ಯರನ್ನು ಸಮಾಧಾನಪಡಿಸಲಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ.
ರೈತರಿಗೆ ಬೆಳೆ ಪರಿಹಾರ ಧನ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.ಕೇವಲ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಾ ಪ್ರತಿಪಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ನೀಡುತ್ತಿರುವುದು ನಮಗೆ ತೃಪ್ತಿ ತಂದಿಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿ ಹೊರನಡೆದರು. ಆಗ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಎಲ್ಲಾ ಸುಳ್ಳು ಎಂದು ಹೇಳಿ ಹೊರನಡೆದರು. ಬಳಿಕ ಜೆಡಿಎಸ್ ಶಾಸಕರೂ ಕೂಡ ಅವರನ್ನು ಹಿಂಬಾಲಿಸಿದರು. ನಂತರ ಪ್ರತಿಪಕ್ಷಗಳ ವಿರುದ್ಧ ಖಾರವಾಗಿ ಮಾತನಾಡಿದ ಮುಖ್ಯಮಂತ್ರಿ, ಇವರಿಗೆ ನಾಚಿಕೆಯಾಗಬೇಕು. ಕೇಂದ್ರಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರದಿಂದ ಬರಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ. ನಾವು ಕೊಟ್ಟ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಒಂದು ಸಭೆಯನ್ನೂ ಕೂಡ ನಡೆಸಿಲ್ಲ ಎಂದು ವಾಗ್ದಾಳಿ ನಡೆಸಿದರು. ರೈತರು, ಬಡವರು, ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು, ಸಂವಿಧಾನ ವಿರೋಧಿ ಎಂದು ಆರೋಪಿಸಿದ ಅವರು, ನಾವು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
