ಉದಯವಾಹಿನಿ,ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಟಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು.

ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್‍ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು.
ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಟಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ಧ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.

Leave a Reply

Your email address will not be published. Required fields are marked *

error: Content is protected !!