ಉದಯವಾಹಿನಿ, ಕೆ.ಆರ್.ಪೇಟೆ : ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೀಠಾದ್ಯಕ್ಷರಾಗಿ ಹತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದಿನಾಂಕ 02-03-2024 ರಂದು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪರಮಪೂಜ್ಯ ಜಗದ್ಗುರು, ಯುಗಯೋಗಿ, ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ನಂತರ ಪೀಠಾದ್ಯಕ್ಷರಾಗಿ ನೇಮಕಗೊಂಡು ಶ್ರೀಕ್ಷೇತ್ರದ ಆಶೋತ್ತರಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ಮೂಲಕ ಕ್ಷೇತ್ರದ ಹಿರಿಮೆಯನ್ನು ದೇಶವಿದೇಶಗಳಿಗೂ ಪಸರಿಸುತ್ತಾ ಸರ್ವಧರ್ಮೀಯರನ್ನೂ ಸಮನಾಗಿ ಕಾಣುವ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೀಠಾದ್ಯಕ್ಷರಾಗಿ ನೇಮಕಗೊಂಡು ಹತ್ತು ವರ್ಷಗಳು ತುಂಬಿವೆ. ಇದರ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದು ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀಶ್ರೀ ಪುರುಷೋತ್ತಮಾನಂದ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಭಾಗವಹಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಜಿಲ್ಲೆಯ ಎಲ್ಲಾ ಶಾಸಕರನ್ನು ಅಭಿನಂದಿಸುವ ಮತ್ತು ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರನ್ನು ಗುರುತಿಸಿ ಅವರುಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ತಾಲ್ಲೂಕಿನಿಂದ ಒಕ್ಕಲಿಗ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
