ಉದಯವಾಹಿನಿ, ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿಯನ್ನು ಮತ್ತಷ್ಟು ಅಧ್ಯಯನಕ್ಕೆ ಒಳಪಡಿಸಲು ಸಚಿವ ಸಂಪುಟ ಉಪಸಮಿತಿ ರಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. 2015 ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮಾಹಿತಿಗಳನ್ನು ಜಯಪ್ರಕಾಶ್ ಹೆಗ್ಡೆ ಅವರ ಸಮಿತಿ ದತ್ತಾಂಶ ಸಮೀಕರಿಸಿ ಸರ್ಕಾರಕ್ಕೆ ವರದಿ ನೀಡಿದೆ.

ಅದರಲ್ಲಿ ಜಾತಿವಾರು ಜನಸಂಖ್ಯೆಯ ವಿವರಗಳಿದ್ದು, ವಿಧಾನಸಭಾ ಕ್ಷೇತ್ರವಾರು ಜಾತಿ ಜನಗಣತಿಯ ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ವರದಿಯ ಮಾಹಿತಿಗಳು ಅಧಿಕೃತವಾಗಿ ಇನ್ನೂ ಹೊರಬಂದಿಲ್ಲ. ನಿನ್ನೆ ಇದ್ದಕ್ಕಿದ್ದಂತೆ ಮಾಧ್ಯಮಗಳಲ್ಲಿ ಕೆಲವು ದತ್ತಾಂಶಗಳು ಬಹಿರಂಗಗೊಂಡಿವೆ. ಅದು ಕೆಲ ಸಮುದಾಯವನ್ನು ಮತ್ತಷ್ಟು ಕೆರಳುವಂತೆ ಮಾಡಿದೆ. ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದೆ. ವರದಿಗೆ ಕಾಂಗ್ರೆಸ್‍ನ ಹಿರಿಯ ಶಾಸಕರಾಗಿರುವ ಶ್ಯಾಮನೂರು ಶಿವಶಂಕರಪ್ಪ ಬಹಿರಂಗವಾಗಿ ವಿರೋಧಿಸಿದ್ದಾರೆ. ಒಕ್ಕಲಿಗ ಸಮುದಾಯ ಕೂಡ ವರದಿಯನ್ನು ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದೆ. ಈ ಹಂತದಲ್ಲಿ ವರದಿಯಲ್ಲಿರುವ ದತ್ತಾಂಶಗಳನ್ನು ಬಹಿರಂಗಗೊಳಿಸಿದರೆ ಅದು ಲೋಕಸಭೆ ಚುನಾವಣೆಯ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ.
8ವರ್ಷಗಳ ಹಿಂದೆ ನಡೆದ ಸಮೀಕ್ಷೆಯ ದತ್ತಾಂಶಗಳನ್ನು ಈಗಲೂ ಪಾಲನೆ ಮಾಡುವುದು ಅವೈಜ್ಞಾನಿಕ ಎಂಬುದು ವರದಿಯನ್ನು ವಿರೋಧಿಸುವವರ ಅಭಿಪ್ರಾಯವಾಗಿದೆ. ವರದಿ ನೀಡಿದ ಜಯಪ್ರಕಾಶ್ ಹೆಗ್ಡೆಯವರು, ಆಗಿನ ಸಮೀಕ್ಷಾ ಮಾಹಿತಿಗಳ ಜೊತೆಗೆ ನಮ್ಮ ಆಯೋಗ ವರ್ತಮಾನದ ಅಂಕಿ ಅಂಶಗಳನ್ನು ಕಲೆ ಹಾಕಿ ಸಮಗ್ರವಾಗಿ 2024 ರ ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!