ಉದಯವಾಹಿನಿ, ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ದಿನಗಣನೆ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ರಕ್ಷಾ ರಾಮಯ್ಯ ಹಾಗೂ ಡಾ. ಎಂ. ವೀರಪ್ಪಮೊಯ್ಲಿ ಇವರ ಮಧ್ಯೆ ಟಿಕೆಟ್ಗೆ ಫೈಟ್ ನಡೆದಿದ್ದು ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ದೊರಕುವುದು ಎಂಬ ಬಗ್ಗೆ ತೀವ್ರ ಕುತೂಹಲ ಹಾಗೂ ತಳಮಳ ಕಾಂಗ್ರೆಸ್ ಪಕ್ಷದ ಮುಖಂಡರುಗಳಲ್ಲಿ ಮತ್ತು ಕಾರ್ಯಕರ್ತರಲ್ಲಿ ಉಂಟಾಗಿದೆ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಇದೇ ಚಿಕ್ಕಬಳಾಪುರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಎರಡು ಬಾರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಡಾ.ಎಂ ವಿರಪ್ಪಮೊಯ್ಲಿ ರವರು ಈ ಬಾರಿ ಮತ್ತೆ ಇದೇ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದು ಇನ್ನೂ ಟಿಕೆಟ್ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲೇ ದಿನದೂಡುತ್ತಿದ್ದಾರೆ ಇದರ ನಡುವೆ ಯಾರಿಗೆ ಟಿಕೆಟ್ ನೀಡಿದರೂ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವೆ ಎಂದು ಹೇಳುವ ಮೂಲಕ ಮೊಯ್ಲಿ ಅವರು ದ್ವಂದ್ವ ನಿಲುವಿನಲ್ಲಿದ್ದಾರೆ.ಇನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಮ್ ಆರ್.ಸೀತಾರಾಮ್ ರವರ ಪುತ್ರ ರಕ್ಷಾರಾಮಯ್ಯ ರವರು ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಖಚಿತವಾಗಿ ಸ್ಪರ್ಧಿಸುತ್ತೇನೆ, ನನಗೆ ಗೆಲುವು ನಿಶ್ಚಿತ ಎಂಬ ನಂಬಿಕೆಯಿಂದ ಕಳೆದ 6-7 ತಿಂಗಳಿನಿಂದ ಕ್ಷೇತ್ರದಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷದ ಮುಖಂಡರುಗಳನ್ನು, ಕಾರ್ಯಕರ್ತರನ್ನು ನಿರಂತರ ಭೇಟಿ ಮಾಡಿ ಸಂಪರ್ಕದಲ್ಲಿ ಇದ್ದಾರೆ.
ಅದೇ ರೀತಿ ಕಾಂಗ್ರೆಸ್ ಪಕ್ಷವು ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಯುವ ಪಡೆ ರಕ್ಷಾ ರಾಮಯ್ಯ ಪರ ನಿಂತು ಗೆಲುವಿಗೆ ಅಹರ್ನಿಶಿ ಶ್ರಮಿಸುವ ವಿಶ್ವಾಸ ಇಟ್ಟಿದ್ದಾರೆ.
