ಉದಯವಾಹಿನಿ, ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಯಾವುದೇ ಸಮಸ್ಯೆ ಇಲ್ಲದಂತೆ ಮತದಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ಮನವಿ ಮಾಡಿಕೊಂಡರು.
ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರವಾಹನಗಳಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ. ಅದರಂತೆ, ವಿಶೇಷ ಚೇತನರು, 85 ವರ್ಷ ಮೇಲ್ಪಟ್ಟವರು ಹಾಗೂ ತೃತೀಯ ಲಿಂಗಿಗಳು ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಗುತ್ತಿದೆ ಎಂದರು.
ವಿಶೇಷ ಚೇತನರು ಮತದಾನ ಮಾಡುವ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತಗಟ್ಟೆಗಳ ಬಳಿ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲಾ ವಿಶೇಷ ಚೇತನರು ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಮನವಿ ಮಾಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರವರು ಜಾಥಾಗೆ ಚಾಲನೆ ನೀಡಿದರು. ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮವು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಪ್ರಾರಂಭವಾಗಿ ಕೆ.ಆರ್ ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಕಂಠೀರವ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

error: Content is protected !!