ಉದಯವಾಹಿನಿ, ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಬಂಡಾಯ ಈವರೆಗೂ ಶಮನವಾಗಿಲ್ಲ, ಸಚಿವ ಕೆ.ಎಚ್.ಮುನಿಯಪ್ಪ ಈವರೆಗೂ ಕ್ಷೇತ್ರದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸದೆ ದೂರ ಉಳಿದಿರುವುದು ಕಾಂಗ್ರೆಸ್ಸಿಗರಿಗೆ ತಲೆನೋವಾಗಿ ಪರಿಣಮಿಸಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ತಮಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದು, ತಾವು ಅಲ್ಲಿ ಕೆಲಸ ಮಾಡುವುದಾಗಿ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಕುಮಾರ್ ಹಾಗೂ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ ನಡುವಿನ ಬಂಡಾಯ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.ಮುನಿಯಪ್ಪ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಸಲು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಒಂದು ಹಂತದಲ್ಲಿ ಹೈಕಮಾಂಡ್ ಒಪ್ಪಿಕೊಂಡಿತ್ತು. ಆದರೆ ಕಾಂಗ್ರೆಸ್ನ ಸಚಿವರು, ಶಾಸಕರು ಇದಕ್ಕೆ ಒಪ್ಪದೆ ರಾಜೀನಾಮೆ ನೀಡಲು ಮುಂದಾಗಿದ್ದರು.
ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಿದರೆ ತಾವು ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪತ್ತನೂರು ಮಂಜುನಾಥ್, ಕೆ.ವೈ.ನಂಜೇಗೌಡ, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್, ಅನಿಲ್ಕುಮಾರ್, ಎಸ್.ಎನ್. ನಾರಾಯಣಸ್ವಾಮಿ ಬೆದರಿಕೆ ಹಾಕಿದ್ದರು. ಸಾಲದೆಂಬಂತೆ ಕೋಲಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆ 3.80 ಲಕ್ಷ ಇದೆ. ಆ ಸಮುದಾಯಕ್ಕೆ ಅವಕಾಶ ಮಾಡಿಕೊಡಿ ಎಂದು ಪ್ರತಿಪಾದಿಸುವ ಮೂಲಕ ಮುನಿಯಪ್ಪ ಅವರ ಕುಟುಂಬದ ವಿರುದ್ಧ ಸೆಡ್ಡು ಹೊಡೆದಿದ್ದರು.
ಕೊನೆಗೆ ರಾಜ್ಯ ನಾಯಕರು ಅಳೆದು ತೂಗಿ ಯಾರಿಗೂ ಅಸಮಾಧಾನವಾಗಬಾರದು ಎಂಬ ಕಾರಣಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಎಡಗೈ ಸಮುದಾಯದ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೋಲಾರ ಟಿಕೆಟ್ ಹಂಚಿಕೆಯ ಗೊಂದಲ ಮುಗಿದ ಬಳಿಕ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೋಲಾರ ಜಿಲ್ಲೆಯ ಕುರುಡುಮಲೆಯ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್ನ ಪ್ರಜಾಧ್ವನಿ-2 ಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ರಮೇಶ್ಕುಮಾರ್ ಬಣದ ಎಲ್ಲಾ ನಾಯಕರೂ ಹಾಜರಿದ್ದರು. ಸಚಿವ ಮುನಿಯಪ್ಪ ಮತ್ತು ಅವರ ಪುತ್ರಿ ಹಾಗೂ ಶಾಸಕಿಯಾಗಿರುವ ರೂಪ ಶಶಿಧರ್ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು.
