ಉದಯವಾಹಿನಿ, ಬೆಂಗಳೂರು: ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ರಾಜ್ಯ ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಜೆಡಿಎಸ್, 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸ ಭೋಜನ ಮುಂದುವರಿಸಿದೆ ಎಂದು ಆಪಾದಿಸಿದೆ.
ತುರುವೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯ ನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು 200 ರಿಂದ 400 ರೂ.ಗೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ? ಎಂದು ಪ್ರಶ್ನಿಸಿದೆ.

2018-19ರಲ್ಲಿ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ 25,000 ಕೋಟಿ ರೂ. ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ. ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸ್ಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ? ಎಂದು ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಅಷ್ಟೇ ಏಕೆ? ಒಂದು ಕೈಯ್ಯಲ್ಲಿ 2000 ರೂ. ಕೊಟ್ಟು ಇನ್ನೊಂದು ಕೈಯ್ಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ! ಇಲ್ಲಾ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ? ಎಂದು ಟೀಕಿಸಿದೆ. ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರೀ ಪ್ರೋತ್ಸಾಹ ಕೊಡುವುದು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?

Leave a Reply

Your email address will not be published. Required fields are marked *

error: Content is protected !!