ಉದಯವಾಹಿನಿ , ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್ ಒಡೆಯರ್‍ರವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವವರೊಂದಿಗೆ ಸಭೆ ನಡೆಸಿದ್ದಾರೆ. ಆ ವೇಳೆ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿದ್ದಾರೆ.
ಉಡುಗೊರೆಗಳ ಜೊತೆಗೆ ಹಣವನ್ನೂ ನೀಡಲಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಮತದಾರರಿಗೆ ಹಣ ನೀಡುವುದಷ್ಟೇ ಅಲ್ಲ, ಮತದಾನದ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಯದುವೀರ್ ಒಡೆಯರ್ ಅವರ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!