ಉದಯವಾಹಿನಿ, ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.
ಮುಂದುವರೆದು ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆದರೆ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂಬ ಕಾರಣಕ್ಕೆ ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಿದರು.
ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
