ಉದಯವಾಹಿನಿ,ಕನಕಪುರ: ಮೈಸೂರು ರಸ್ತೆಯ ಬೆಟ್ಟಲಗುಂಡಪ್ಪ ದೇವಸ್ಥಾನದ ಮುಂಭಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆನೇಕಲ್ ದಂಪತಿಯನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ಉಪಚರಿಸಿ ಆಸ್ಪತ್ರೆಗೆ ಕಳುಹಿಸಿದರು.
ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿ ರಸ್ತೆಯಲ್ಲಿ ಬಿದ್ದಿದ್ದರು. ಕಬ್ಬಾಳು ದೇವಸ್ಥಾನದ ಬಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಮಂಜುನಾಥ್ ಅವರು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಆರೈಕೆ ಮಾಡಿ ಆಟೊದಲ್ಲಿ ಆಸ್ಪತ್ರೆಗೆ ಕಳಿಸಿಕೊಟ್ಟರು.
ಆನೇಕಲ್ನ ದಂಪತಿ ಮುತ್ತತ್ತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಬೈಕ್ನಲ್ಲಿ ತಮ್ಮ ಊರಿಗೆ ಮರಳುತ್ತಿದ್ದಾಗ ಹಿಂಬದಿಯಿಂದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ದಂಪತಿಯನ್ನು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕಳಿಸಲಾಗಿದೆ. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
