ಉದಯವಾಹಿನಿ, ಆನೇಕಲ್: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರನಟ ದರ್ಶನ್ ಒಡೆತನದ ಫಾರ್ಮ್ಹೌಸ್ ಮೇಲ್ವಿಚಾರಕ ಶ್ರೀಧರ್ ಆತ್ಮಹತ್ಯೆಗೆ ಸಂಬಂಧಿಸಿದ ಕಡತಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಂಗಳವಾರ ತರಿಸಿಕೊಂಡು ಪರಿಶೀಲಿಸಿದರು.
‘ಮಗನ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಶ್ರೀಧರ್ ತಂದೆ ಆನೇಕಲ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹಾಗಾಗಿ ಸಂಬಂಧಿಸಿದ ಕಡತ, ಮರಣೋತ್ತರ ಪರೀಕ್ಷೆ ಮತ್ತು ಎಫ್ಎಸ್ಎಲ್ ವರದಿ ಪರಿಶೀಲಿಸಲಾಗುತ್ತಿದೆ’ ಎಂದು ಬಾಲದಂಡಿ ತಿಳಿಸಿದರು.
ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಪಂಚಾಯಿತಿ ವ್ಯಾಪ್ತಿಯ ಬಗ್ಗನದೊಡ್ಡಿ ಗ್ರಾಮದಲ್ಲಿ ನಟ ದರ್ಶನ್ ಒಡೆತನದ ಫಾರ್ಮ್ಹೌಸ್ ಇದೆ. ಅದರ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ್ (35) ಇದೇ ಏ.17ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸಾವಿಗೂ ಮುನ್ನ ಬರೆದಿಟ್ಟಿರುವ ಮರಣಪತ್ರದಲ್ಲಿ (ಡೆತ್ನೋಟ್) ತನ್ನ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಹೇಳಿದ್ದ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.
