ಉದಯವಾಹಿನಿ, ಮೈಸೂರು: ಡಿಕೆ.ಶಿವಕುಮಾರ್ ಕನಕಪುರ ಶಾಸಕ, ಅದು ಖಾಲಿ ಆಗುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಪಕ್ಷ ಏನೇ ತೀರ್ಮಾನ ಮಾಡಿದರೂ ಅದನ್ನು ಮಾಡಲು ರೆಡಿ ಎಂದೂ ಹೇಳಿದ್ದಾರೆ. ಮುಂದೆ ಏನಾಗಬೇಕು ನೋಡಿಕೊಳ್ಳುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಮಗೆ ಸೋಲಾಗಿದೆ‌. ವಿಧಾನಸಭಾ ಚುನಾವಣೆಯಲ್ಲಿ ನಾವು ಹೆದರದೆ ಕೆಲಸ ಮಾಡೋಣ. ನಾವೆಲ್ಲ ಧೈರ್ಯದಿಂದ ಇರೋಣವೆಂದು ಹೇಳುವ ನಿಟ್ಟಿನಲ್ಲಿ ಡಿಕೆ.ಶಿವಕುಮಾರ್ ಆ ರೀತಿ ಹೇಳಿಕೆ ನೀಡಿದ್ದಾರೆ. ಸದ್ಯ ಚಲುವರಾಯಸ್ವಾಮಿಯನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಎಲ್ಲವನ್ನೂ ಅವಲೋಕನ ಮಾಡಿ ಮುಂದರ ತೀರ್ಮಾನಿಸಲಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.
ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪತ್ರಿಕೆಯಲ್ಲಿ ಬಂದ ಸುದ್ದಿ ನೋಡಿದ್ದೇನೆ. ಯಾರೋ ಹೋಗಿ ದೂರು ಕೊಟ್ಟಿದ್ದಾರಂತೆ. ಪತ್ರಿಕೆ ಸುದ್ದಿ ನೋಡಿ ಪ್ರತಿಕ್ರಿಯೆ ಕೊಡಲಾಗುತ್ತದೆಯೇ? ಕಾನೂನು ಇದೆ, ಅದರ ಪ್ರಕಾರ ಶಿಕ್ಷೆಯಾಗುತ್ತದೆ ಎಂದರು. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ವಿಚಾರವಾಗಿ ಮಾತನಾಡಿದ ಸಚಿವರು, ಈಗ ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಸೊಳ್ಳೆಗಳ ಮೂಲಕ ಡೆಂಗ್ಯೂ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!