ಉದಯವಾಹಿನಿ, ತುಮಕೂರು: ಜಿಲ್ಲೆಯ ಪಾಲಿನ ಹೇಮಾವತಿ ನೀರನ್ನು ಪ್ರತ್ಯೇಕ ಎಕ್್ಸಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಕೊಂಡೊಯ್ಯುವ ಯೋಜನೆ ವಿರೋಧಿಸಿ ಇಂದು ಕರೆ ನೀಡಿದ್ದ ಜಿಲ್ಲಾ ಬಂದ್ ಬಹುತೇಕ ಯಶಸ್ವಿಯಾಗಿ ನಡೆಯಿತು.ವಿವಿಧ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಬಿಜೆಪಿ-ಜೆಡಿಎಸ್ ಜಿಲ್ಲಾ ಘಟಕಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದವು.
ಬಹುತೇಕ ಅಂಗಡಿಗಳನ್ನು ಬಂದ್ ಮಾಡಿ ವರ್ತಕರು ಸ್ವಯಂಪ್ರೇರಿತವಾಗಿ ಬೆಂಬಲ ಸೂಚಿಸಿದರು. ಅಗತ್ಯ ಸೇವೆಗಳು ಎಂದಿನಂತೆ ಇದ್ದವು. ಜನರ ಓಡಾಟ ಹಾಗೂ ವಾಹನಗಳ ಸಂಚಾರ ವಿರಳವಾಗಿತ್ತು.
ನಗರದ ಟೌನ್ಹಾಲ್ ವೃತ್ತದ ಬಳಿ ಹೋರಾಟ ಸಮಿತಿ ಸದಸ್ಯರು, ರೈತರು, ಸಂಘ ಸಂಸ್ಥೆಗಳು, ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಸಮಾವೇಶಗೊಂಡು ಖಾಲಿ ಕೊಡಗಳನ್ನು ಹಿಡಿದು ಮಾನವ ಸರಪಳಿ ನಿರ್ಮಿಸಿ, ಉರುಳುಸೇವೆ ಮಾಡಿ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಹಿಳಾ ಮುಖಂಡರು ಸಹ ಖಾಲಿ ಕೊಡಗಳನ್ನು ಪ್ರದರ್ಶಿಸಿ ರಕ್ತಕೊಟ್ಟೆವು, ಹೇಮಾವತಿ ಬಿಡೆವು ಎಂಬ ಘೋಷವಾಕ್ಯದೊಂದಿಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಬಾರದೆಂದು ಆಕ್ರೋಶ ಹೊರಹಾಕಿದವು.
