ಉದಯವಾಹಿನಿ, ಬೆಂಗಳೂರು: ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪಶು ಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಆಶ್ವಾಸನೆ ನೀಡಿದರು.
ವಿಧಾನಪರಿಷತ್ನಲ್ಲಿ ಸದಸ್ಯ ಹನುಮಂತ ನಿರಾಣಿಯವರು ಬಾಗಲಕೋಟೆ , ವಿಜಾಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸುಮಾರು 31 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಗಮನಸೆಳೆದರು.
ಈ ವೇಳೆ ಸಚಿವ ರಾಜಣ್ಣ ಉತ್ತರಿಸಲು ಮುಂದಾದಾಗ ಮಧ್ಯಪ್ರವೇಶಿಸಿದ ವೆಂಕಟೇಶ್ ಅವರು, ಬಾಕಿ ಇರುವ ಹಾಲಿನ ಪ್ರೋತ್ಸಾಹಧನ ನಮ್ಮ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿಸಿಕೊಳ್ಳಲಾಗಿತ್ತು. 700 ಕೋಟಿ ಬಾಕಿ ಇತ್ತು. ನಮ್ಮ ಸರ್ಕಾರ 200 ಕೋಟಿ ಸಹಾಯಧನವನ್ನು ಬಿಡುಗಡೆ ಮಾಡಿದೆ ಎಂದರು.ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರು, ಯಾವ ಪಕ್ಷದ ಸರ್ಕಾರ ಇದೆ ಎಂಬುದು ಮುಖ್ಯವಲ್ಲ. ಮೊದಲು ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಿ. ಹಿಂದೆ ನಿಮ ಸರ್ಕಾರದ ಅವಧಿಯಲ್ಲಿ ಬಾಕಿ ಇರಲಿಲ್ಲವೇ? ರೈತರಿಗೇಕೆ ಇಂತಹ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಆಗ ಸಚಿವ ರಾಜಣ್ಣ ಇದು ನಿರಂತರವಾದ ಪ್ರಕ್ರಿಯೆ. ಎಲ್ಲಾ ಸರ್ಕಾರಗಳು ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಬೇಕು. ಇದರಲ್ಲಿ ಯಾವ ಸರ್ಕಾರ ಎಂಬುದು ಮುಖ್ಯವಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಇದ್ದ ಕಾರಣ ವಿಳಂಬವಾಗಿದೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
