ಉದಯವಾಹಿನಿ, ಬೆಂಗಳೂರು: ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು ರಾಜ್ಯಸರ್ಕಾರ ಪ್ರಯತ್ನಪೂರ್ವಕವಾಗಿ ತಡೆಹಿಡಿದಿತ್ತು. ಆದರೆ ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ಪ್ರಸ್ತಾವನೆಗಳಿವೆ.
ಪ್ರಸ್ತುತ ಜಾರಿಯಲ್ಲಿರುವ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಬದಲಾವಣೆ ಮಾಡಿ ಆಸ್ತಿಗಳ ಮೌಲ್ಯದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾವನೆಗಳಿವೆ.ಸ್ವಯಂ ಸ್ವಾಧೀನದಲ್ಲಿರುವ ಜನವಸತಿ ಪ್ರದೇಶಗಳಿಗೆ ಮಾರ್ಗಸೂಚಿ ಮೌಲ್ಯದ ಮೇಲೆ ಶೇ.0.1 ರಷ್ಟು ಬಾಡಿಗೆ ಆಧಾರಿತ ಆಸ್ತಿಗಳಿಗೆ ಶೇ.0.2 ರಷ್ಟು ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆದಿವೆ.
ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಗಳಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬರುತ್ತಿಲ್ಲ. ಬಹಳಷ್ಟು ಮಂದಿ ತಪ್ಪು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯ ಬಗ್ಗೆಯೂ ಚರ್ಚೆಗಳಾಗಿವೆ. ಸಂಚಾರ ದಟ್ಟಣೆ ನಿರ್ವಹಣೆಗೆ ಬೆಂಗಳೂರಿನಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳ ನಿರ್ಮಾಣ ಕುರಿತು ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅತೀ ಉದ್ದನೆಯ ಸುರಂಗ ಮಾರ್ಗ ರಸ್ತೆ ಕುರಿತು ಪ್ರಸ್ತಾವನೆಗಳಿವೆ. ಅದೇ ರೀತಿ ಬೆಂಗಳೂರಿನಲ್ಲಿ 200 ಕಿ.ಮೀ. ಹೊಸ ರಸ್ತೆಗಳ ನಿರ್ಮಾಣಕ್ಕೂ ತಯಾರಿಗಳಾಗಿದ್ದು, ಈ ರಸ್ತೆಗಳಿಗೆ 50 ಅಡಿ ಇಕ್ಕೆಲಗಳಲ್ಲಿ ಬಫರ್‌ಝೂನ್‌ ಕಾಯ್ದಿರಿಸುವ ಬಗ್ಗೆಯೂ ಚರ್ಚೆಗಳಾಗಿವೆ.

Leave a Reply

Your email address will not be published. Required fields are marked *

error: Content is protected !!