ಉದಯವಾಹಿನಿ, ಚಿಕ್ಕಮಗಳೂರು: ಮಲೆನಾಡು, ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಮುದ್ವತಿ, ತುಂಗಾ, ಹಾರಂಗಿ, ಕಾವೇರಿ, ಕಪಿಲಾ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಧಾರಕಾರ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಹೊಲ-ಗದ್ದೆಗಳು ಜಲಾವೃತಗೊಂಡಿವೆ. ಮತ್ತೆ ಕೆಲವೆಡೆ ಮನೆಗಳು ಕುಸಿದು ಸಾವು-ನೋವುಗಳು ಸಂಭವಿಸಿವೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಶಿರಾಡಿಘಾಟ್‍ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸಕಲೇಶಪುರ ದೊಡ್ಡತೋಪು ಬಳಿ ರಸ್ತೆಗೆ ಮಣ್ಣು ಕುಸಿದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಚಾರಕ್ಕೆ ಅಡಚಣೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿದು ಶೃಂಗೇರಿ ತಾಲ್ಲೂಕು ನೆಮ್ಮಾರಮಕ್ಕಿ ಬಳಿ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸವಾರರು ಪರದಾಡುವಂತಾಯಿತು.
ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಸಂಚಾರ ನಿರ್ಬಂvಸಲಾಗಿದೆ. ರಸ್ತೆ ಬಂದ್ ಮಾಡಲಾಗಿದೆ. ಧಾರ್ಮಿಕ ಕ್ಷೇತ್ರ ನಂಜುಂಡೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿ ಕುಸಿದಿದ್ದ ಗುಡ್ಡ ತೆರವು ಕಾರ್ಯಚರಣೆ ಮುಂದುವರೆದಿದೆ. ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಐದು ದಿನಗಳಿಂದ NDRF ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಹತ್ತು ಮಂದಿ ಮಣ್ಣಿನಡಿ ಸಿಲುಕಿದ್ದು, ಏಳು ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!