ಉದಯವಾಹಿನಿ,ಬ್ಯಾಡಗಿ : ಹದಗೆಟ್ಟಿರುವ ಮುಖ್ಯ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ರಸ್ತೆ ಅಗಲೀಕರಣ ಹೋರಾಟ ಸಮಿತಿ ಸದಸ್ಯರು ಬುಧವಾರ ಕೆರೆಯಂತಾಗಿರುವ ರಸ್ತೆಯಲ್ಲಿ ಎಮ್ಮೆಗಳ ಮೈತೊಳೆದು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ ಛಲವಾದಿ ಮಾತನಾಡಿ, ಕಳೆದ 15 ವರ್ಷಗಳಿಂದ ಮುಖ್ತ ರಸ್ತೆ ವಿಸ್ತರಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ, ರಸ್ತೆ ವಿಸ್ತರಣೆಯಾಗದೆ ಜನ ಬೇಸತ್ತಿದ್ದಾರೆ.
ಈಗ ಮುಖ್ಯ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ತಗ್ಗು ಗುಂಡಿಗಳಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಗುಂಡಿಗಳಲ್ಲಿ ನಿಂತಿರುವ ನೀರಿನಿಂದಲೇ ಎಮ್ಮೆಗಳನ್ನು ತೊಳೆದು ರಸ್ತೆ ವಿಸ್ತರಣೆಗೆ ಅಡ್ಡಗಾಲು ಹಾಕುತ್ತಿರುವ ಜನ ಪ್ರತಿನಿಧಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೇವೆ ಎಂದರು.
ಭೂಸ್ವಾಧೀನಕ್ಕೆ ನಿಯಮಾನುಸಾರ ಕಾನೂನು ಪ್ರಕ್ರಿಯೆ ಮಾಡದ ಅಧಿಕಾರಿಗಳ ತಪ್ಪಿನಿಂದಾಗಿ ವಿಸ್ತರಣೆ ಪ್ರಕ್ರಿಯೆ ನಿಂತು ಹೋಗಿದೆ. ಆ.15ರೊಳಗೆ ವಿಸ್ತರಣೆ ಪ್ರಕ್ರಿಯೆ ಆರಂಭಿಸುವುದಾಗಿ ಶಾಸಕರು ಭರವಸೆ ನೀಡಿದ್ದರು. ಆದರೆ ವಿಸ್ತರಣೆಯ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಆ.15ರ ಬಳಿಕ ರಸ್ತೆಯ ಎರಡೂ ಬದಿಗೂ ಗುಂಡಿ ತೆಗೆದು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
