ಉದಯವಾಹಿನಿ, ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಮಳೆಯ ರೌದ್ರ ನರ್ತನಕ್ಕೆ ಹಲವೆಡೆ ಭೂಕುಸಿತ ಉಂಟಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಮಲೆನಾಡು, ಕರಾವಳಿ ಭಾಗದಲ್ಲಿ ಬೆಟ್ಟ- ಗುಡ್ಡಗಳು ಕುಸಿದು ಬೀಳುತ್ತಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಅತ್ತ ಕೇರಳದ ವಯನಾಡಿನಲ್ಲಿ ಭೂಕುಸಿತ ದುರಂತ ಸಂಭವಿಸಿ ನೂರಾರು ಜನ ಸಾವನ್ನಪ್ಪಿ ಮತ್ತೆ ನೂರಾರು ಜನ ನಾಪತ್ತೆಯಾಗಿ ಬಿರುಸಿನ ಕಾರ್ಯಾಚರಣೆ ನಡೆಯುತ್ತಿದೆ.ಇತ್ತ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ನಿಲ್ಲದ ಮಳೆಯ ಅಬ್ಬರಕ್ಕೆ ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಉಂಟಾಗಿ ಹಲವು ಅನಾಹುತಗಳು ಸಂಭವಿಸುತ್ತಿವೆ.
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಪ್ರಾಣಾಪಾಯ ಆಗದಿದ್ದರೂ ನಿರಂತರವಾಗಿ ಗುಡ್ಡ, ಭೂಮಿ ಕುಸಿಯುತ್ತಿರುವುದು ಜನರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ಮಳೆ ಬೇಕು, ಬೇಕು ಎನ್ನುತ್ತಿದ್ದ ಜನ ಈಗ ಮಳೆ ಸಾಕಪ್ಪ ದೇವರೇ ಎಂದು ಹೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನರು ಪ್ರವಾಹದ ಭೀತಿಯಲ್ಲಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ಸೇತುವೆಗಳು, ರಸ್ತೆಗಳು, ಮಳೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರ ಬಿಡುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ ಭಾಗದಲ್ಲಿ ಜನರು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಇನ್ನು ಯಾವ ಪ್ರಮಾಣದ ಅಪಾಯ ಎದುರಾಗಬಹುದೋ ಎಂಬ ಆತಂಕ ಉಂಟಾಗಿದೆ.
ಹಾಸನದ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡ ತಪ್ಪಲೆ ಬಳಿ ಭೂಕುಸಿತ ಮುಂದುವರೆದಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
