ಉದಯವಾಹಿನಿ, ಗಜೇಂದ್ರಗಡ: ‘ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಹಂಬಲದೊಂದಿಗೆ ಕ್ರೀಡೆಗಳಲ್ಲಿ ಸ್ಪರ್ಧಿಸಬೇಕು’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಸಮೀಪದ ಪುರ್ತಗೇರಿ ಕ್ರಾಸ್ನಲ್ಲಿರುವ ಶ್ರೀ ಅನ್ನದಾನೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆಡದ 2024-25ನೇ ಸಾಲಿನ ಗಜೇಂದ್ರಗಡ ತಾಲ್ಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ. ಕ್ರೀಡೆಯಲ್ಲಿ ಜಾತಿ, ಧರ್ಮ ಭೇದವಿಲ್ಲ. ಸಾಮರಸ್ಯ, ಸಹಬಾಳ್ವೆಯಿಂದ ಬಾಳಲು ಕ್ರೀಡೆಗಳು ಸಹಕಾರಿ’ ಎಂದರು.
ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಮುಪ್ಪಿನ ಬಸವಲಿಂಗ ಶ್ರೀ, ‘ದೈಹಿಕ ಚಟುವಟಿಕೆಗಳು ಇಲ್ಲದಿದ್ದರೆ ಜನರು ರೋಗಿಗಳಾಗುತ್ತಾರೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ವ್ಯಾಯಾಮವಾಗುತ್ತದೆ’ ಎಂದರು. ಡಿಡಿಪಿಯು ಜಿ.ಎನ್. ಕುರ್ತಕೋಟಿ ಮಾತನಾಡಿ, ‘ಜಿಲ್ಲೆಯ ಫಲಿತಾಂಶ ಸುಧಾರಣೆಗೆ ಈಗಾಗಲೇ ಅನೇಕ ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ. ಉತ್ತಮ ಫಲಿತಾಂಶ ದಾಖಲಿಸಲು ಸಾಂಘಿಕ ಪ್ರಯತ್ನ ಮಾಡಲಾಗುವುದು’ ಎಂದರು.
ಗಜೇಂದ್ರಗಡ ತಾಲ್ಲೂಕಿನ 14 ಪಿಯು ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ತರಬೇತುದಾರರು, 20ಕ್ಕೂ ಹೆಚ್ಚು ನಿರ್ಣಾಯಕರು ಭಾಗವಹಿಸಿದ್ದರು. ಡಿಡಿಪಿಯು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಪ್ರತಿಜ್ಞಾವಿಧಿ ಬೋಧಿಸಲಾಯಿತು.
