ಉದಯವಾಹಿನಿ , ಬೆಂಗಳೂರು: ‘ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ತುಂಗಭದ್ರಾ ಜಲಾಶಯ ವೀಕ್ಷಿಸಲು ತೆರಳುವ ಮೊದಲು ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು ‘ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.
‘ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಕೂಡಾ ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಕೂಡಾ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ’ ಎಂದರು.
