ಉದಯವಾಹಿನಿ , ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಾಗಿ ಹೇಳಿದ್ದರು. ಈಗ ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮೂಲಕ ಜನರನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಜೆಡಿಎಸ್ ಕಚೇರಿಯಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳಬೇಕು. ಇದು ಅದರ ಕರ್ತವ್ಯ ಕೂಡ ಎಂದರು.
ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಕ ಪಾಟೀಲ್ಗೂ ಫ್ರೀ, ಮಹದೇವಪ್ಪಗೂ ಫ್ರೀ ಅಂದಿದ್ರು. ಅವರಾಗಲೀ, ಜನರಾಗಲೀ ಉಚಿತ ಖಾತ್ರಿಗಳನ್ನು ನೀಡುವಂತೆ ಕೇಳಿರಲಿಲ್ಲ. ಆದರೂ 5 ಗ್ಯಾರಂಟಿಯ ಭರವಸೆ ಕೊಟ್ಟಿದ್ದರು. ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಹೇಳಿದರು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಸ್ತಿಗಳ ಮಾರ್ಗಸೂಚಿ ದರ ಶೇ.30ರಷ್ಟು ಹೆಚ್ಚಳ ಮಾಡಿದ್ದಲ್ಲದೆ, ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳ ಮಾಡಲಾಯಿತು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಸರಿಯಾಗಿ ನೀಡುತ್ತಿಲ್ಲ ಎಂದು ನಿಖಿಲ್ ವಾಗ್ದಾಳಿ ನಡೆಸಿದರು.

ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿ ಜನರ ಗಮನ ಸೆಳೆಯಲಾಯಿತು ಎಂದರು.ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಮುರಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ 27 ಟಿಎಂಸಿ ನೀರು ಜಲಾಶಯದಿಂದ ಹೊರಗೆ ಹೋಗಿದೆ. 63 ಟಿಎಂಸಿಯಷ್ಟು ನೀರು ಖಾಲಿಯಾದ ನಂತರ ಗೇಟ್ ನಿರ್ಮಾಣ ಮಾಡುವುದಾಗಿ ತಜ್ಞರು ಹೇಳಿದ್ದಾರೆ. ರಾಜ್ಯಸರ್ಕಾರ ರೈತರಿಗೆ ನಷ್ಟವಾಗದಂತೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!