ಉದಯವಾಹಿನಿ, ಹಾಸನ: ನಗರಸಭೆ ಹಾಗೂ ಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯು, ಸ್ಥಳೀಯ ಮಟ್ಟದಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿತು.
ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದ ಬಿಜೆಪಿ, ಉಪಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿತ್ತು.

ಆದರೆ, ಆ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸೋತರು. ಜೆಡಿಎಸ್‌ನ ಎಂ. ಚಂದ್ರೇಗೌಡ ಅಧ್ಯಕ್ಷರಾಗಿ ಹಾಗೂ ಬಿಜೆಪಿಯಿಂದ ಗೆದ್ದು ಜೆಡಿಎಸ್‌ ಜೊತೆ ಗುರುತಿಸಿಕೊಂಡಿರುವ ಲತಾ ದೇವಿ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಇನ್ನೊಂದೆಡೆ, ಅರಕಲಗೂಡು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತವಿದ್ದರೂ, ಅಧ್ಯಕ್ಷರಾಗಿ ಕಾಂಗ್ರೆಸ್‌ನ ಪ್ರದೀಪ್‌ಕುಮಾರ್‌ ಆಯ್ಕೆಯಾದರು. ಮೈತ್ರಿಕೂಟದ ಸುಭಾನ್‌ ಷರೀಫ್‌ ಅವರಿಗೆ ಉಪಾಧ್ಯಕ್ಷ ಸ್ಥಾನ ದೊರೆಯಿತು.
ಕಾಂಗ್ರೆಸ್ ಬೆಂಬಲದೊಂದಿಗೆ ಉಪಾಧ್ಯಕ್ಷೆಯಾದ ಬಿಜೆಪಿ ಸದಸ್ಯೆ (ಕೊಪ್ಪಳ ವರದಿ): ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ರಾಜಕೀಯ ಎದುರಾಳಿಗಳಾಗಿ ನಿತ್ಯ ಜಿದ್ದಾಜಿದ್ದಿ ನಡೆಸುತ್ತಿದ್ದರೆ ಕೊಪ್ಪಳ ನಗರಸಭೆಯಲ್ಲಿ ಕಾಂಗ್ರೆಸ್‌ ಬೆಂಬಲದೊಂದಿಗೆ ಬಿಜೆಪಿ ಸದಸ್ಯೆ ಅಶ್ವಿನಿ ಗದಗಿನಮಠ ಬುಧವಾರ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಸ್ಥಳೀಯ ಶಾಸಕ ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ ಆಪ್ತ ಅಮ್ಜದ್‌ ಪಟೇಲ್‌ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.

Leave a Reply

Your email address will not be published. Required fields are marked *

error: Content is protected !!