ಉದಯವಾಹಿನಿ, ಬೆಂಗಳೂರು: ಆಪರೇಷನ್ ಕಮಲದ ಪ್ರಯತ್ನಗಳು ನಡೆಯುತ್ತಿ ರುವ ಬಗ್ಗೆ ಕಾಂಗ್ರೆಸ್ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ನ ಮಧ್ಯವರ್ತಿಗಳು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ 100 ಕೋಟಿ ರೂ. ಆಮೀಷವೊಡ್ಡುತ್ತಿರುವ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸತ್ಯ ಎಂದರು.
ನಮ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ ಎಂದ ಮೇಲೆ ಅದರಲ್ಲಿ ವಾಸ್ತಾವಂಶ ಇದೆ ಎಂದು ಶಾಸಕ ಗಣಿಗ ರವಿಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರ ಪ್ರಸ್ತಾಪಿಸಿದರು.
ಬಿಜೆಪಿ ಹಲವು ದಿನಗಳಿಂದಲೂ ಪ್ರಯತ್ನ ಮಾಡುತ್ತಿದೆ. ಈಗಲೂ ಪ್ರಯತ್ನಗಳು ಮುಂದುವರೆಸಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಹೊಂದಿದೆ. ನಮ ಯಾವ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಲೋಪಗಳೇನು ಎಂದು ಯಾರು ಹೇಳುತ್ತಿಲ್ಲ. ಸ್ವಂತ ಜಾಗವನ್ನು ಕಳೆದುಕೊಂಡರೆ 50:50ರ ಅನುಪಾತದಲ್ಲಿ ನಿವೇಶನ ನೀಡುವುದು ಎಲ್ಲ ನಗರಾಭಿವೃದ್ದಿ ಪ್ರಾಧಿಕಾರಗಳಲ್ಲೂ ಚಾಲ್ತಿಯಲ್ಲಿದೆ. ಕಲಬುರಗಿ ಸೇರಿದಂತೆ ರಾಜ್ಯದ ಹಲವು ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಭೂಮಿ ಕಳೆದುಕೊಂಡವರಿಗೆ ನಿವೇಶನ ನೀಡಿದಂತೆ ಮೈಸೂರಿನಲ್ಲೂ ನೀಡಲಾಗಿದೆ. ಇದನ್ನು ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ಹಗರಣ ಎಂಬಂತೆ ಬಿಂಬಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರದ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಕೈವಾಡವಿದೆ ಎಂದರು.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17ರಡಿ ಅನುಮತಿ ನೀಡಬೇಕಾದರೆ ಅನುಸರಿಸಬೇಕಾದ ಕಾರ್ಯ ವಿಧಾನಗಳ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
