ಉದಯವಾಹಿನಿ, ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.ಗೆದ್ದರೆ ನಾವು ಗೆಲುವಿನ ಕಾರಣಗಳನ್ನು ಹುಡುಕಲು ಹೋಗುವುದಿಲ್ಲ. ಸೋತರೆ ಕಾರಣಗಳನ್ನು ಹುಡುಕಬೇಕಾಗುತ್ತದೆ. ನಾನು ಹುಡುಕುತ್ತಿದ್ದೇನೆ, ಆ ಕಾರಣಗಳೇನು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.ಕೊನೆ ಕ್ಷಣದಲ್ಲಿ ನಾನು ನನ್ನ ಅಭ್ಯರ್ಥಿಗಳಿಗೆ ನಿರೀಕ್ಷಿತ ಆರ್ಥಿಕ ನೆರವು ಕೊಡಲಾಗಲಿಲ್ಲ. ಅಂತಿಮ ಕ್ಷಣದಲ್ಲಿ ನನ್ನ ಪಕ್ಷಗಳ ಅಭ್ಯರ್ಥಿಗಳಿಗೆ ನೆರವು ಕೊಡುವುದು ಕಷ್ಟವಾಯಿತು. ನಿಮ್ಮ ಸಹಾಯಕ್ಕೆ ನಿಲ್ಲದೆ ಹೋದ ಕಾರಣಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಅವರು ಸೋತ ಅಭ್ಯರ್ಥಿಗಳ ಕ್ಷಮೆ ಕೇಳಿದರು.ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು. ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್ ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕುತಂತ್ರದಿಂದ ಗೆದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು. ಅವರ ಪಕ್ಷದವರು ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು ಎಂದು ಟೀಕಾಪ್ರಹಾರ ನಡೆಸಿದರು.
