ಉದಯವಾಹಿನಿ, ಶಿವಮೊಗ್ಗ: ರಾಜ್ಯದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ವೇಳೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನಲ್ಲಿ ಗಲಾಟೆ ನಡೆದಿದೆ. ಒಟ್ಟು 10 ಮಂದಿಗೆ ಗಾಯವಾಗಿದೆ.
ಎರಡು ಸಮುದಾಯದವರು ಒಂದೇ ಸಮಯದಲ್ಲಿ ಗಣಪತಿ ಮೂರ್ತಿಯನ್ನು ಕರೆತರುವ ವೇಳೆ ಎರಡೂ ಸಮುದಾಯದವರಿಗೂ ಒಂದೇ ಡೊಳ್ಳು ಬಾರಿಸುವವರ ಗುಂಪು ಆಗಮಿಸಿತ್ತು.
ಈ ವೇಳ ಹಣದ ವಿಚಾರದಲ್ಲಿ ಗಲಾಟೆ ನಡೆದಿದೆ. ಡೊಳ್ಳು ಬಾರಿಸುವವರ ಮೇಲೆ ಕಲ್ಲು ತೂರಾಟ ನಡೆಸಿ, ದೊಣ್ಣೆಯಿಂದ ಹಲ್ಲೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನೆರೆದ ಗ್ರಾಮಸ್ಥರಿಗೂ ಗಾಯವಾಗಿದೆ.ಈ ಸಮಯದಲ್ಲಿ ಇನ್ನೊಂದು ಗುಂಪಿನವರು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 10 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು 2 ಗುಂಪಿನ 22 ಜನರನ್ನು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಯನ್ನು ಇಂದೇ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಶಾಂತಿಯುತವಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
