ಉದಯವಾಹಿನಿ, ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ. ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ.ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
‘ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ. 40% ಕಮಿಷನ್ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ’ ಎಂದರು.
