ಉದಯವಾಹಿನಿ, ಬೆಂಗಳೂರು : ಅಪಘಾತದಂತಹ ತುರ್ತು ಸಂದರ್ಭದಲ್ಲಿ ಜೀವ ರಕ್ಷಣೆ ಮಾಡುವ ಮಹದುದ್ದೇಶದಿಂದ ಮುಖ್ಯಮಂತ್ರಿಗಳ ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ 65 ನೂತನ ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವರ್ಷಗಳ ಸರಾಸರಿಯಂತೆ ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು. ಪ್ರಸ್ತುತ ಚಾಲ್ತಿಯಲ್ಲಿರುವ 108 ಆರೋಗ್ಯ ಕವಚ ಸೇವೆಯಲ್ಲಿ ಇರುವ ಆ್ಯಂಬುಲೆನ್ಸ್ ಗಳು ರೋಗಿಗಳನ್ನು ಅಥವಾ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ಸೀಮಿತವಾಗಿದೆ. ಅವುಗಳಲ್ಲಿ ಜೀವರಕ್ಷಕ ಸಲಕರಣೆಗಳು ಇವೆ. ಅಲ್ಲಿಂದ ಜಿಲ್ಲಾಸ್ಪತ್ರೆಗೆ ಅಥವಾ ಉನ್ನತ ಚಿಕಿತ್ಸೆಗೆ ಕರೆದೊಯ್ಯಬೇಕಾದರೆ ಸಮಸ್ಯೆಗಳು ಎದುರಾಗುತ್ತವೆ. ಅಪಘಾತದಲ್ಲಿ ತೊಂದರೆಗೊಳಗಾದವರಿಗಾಗಿಯೇ ವಿಶೇಷ ಸೇವೆ ಒದಗಿಸಲು ಆಪತ್ಕಾಲಯಾನ ಆ್ಯಂಬುಲೆನ್ಸ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. 65 ಆ್ಯಂಬುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ಸೌಲಭ್ಯ ಹೊಂದಿವೆ. ವೆಂಟಿಲೇಟರ್, ಔಷಧಿ ಹಾಗೂ ತಂತ್ರಜ್ಞರನ್ನು ಒಳಗೊಂಡಿವೆ.
