ಉದಯವಾಹಿನಿ, ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.
ಧಾರಕಾರವಾಗಿ ಸುರಿದ ಮಳೆ ನಿನ್ನೆ ಸಂಜೆಯಿಂದ ತುಸು ಕಡಿಮೆಯಾಗಿತ್ತಾದರೂ ಸಂಪೂರ್ಣವಾಗಿ ನಿಂತಿರಲಿಲ್ಲ. ಇಂದು ಬೆಳಿಗ್ಗೆ ಯಥಾರೀತಿ ಜಿಟಿಜಿಟಿ ಮಳೆ ಆರಂಭವಾಯಿತು. ನಿನ್ನೆಗೆ ಹೋಲಿಸಿದರೆ ಇಂದು ಮಳೆಯ ಪ್ರಮಾಣ ರಾಜ್ಯದ ಒಳನಾಡಿನಲ್ಲಿ ಕಡಿಮೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದೇ ರೀತಿ ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯಲಿದ್ದು, ಕೆಲವೆಡೆ ಗುಡುಗು-ಮಿಂಚು ಹಾಗೂ ಜೋರಾದ ಗಾಳಿಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಅ.1 ರಿಂದ ನಿನ್ನೆಯವರೆಗೆ ಅವಧಿಯಲ್ಲಿ ರಾಜ್ಯದಲ್ಲಿ 97 ಮಿ.ಮೀ. ನಷ್ಟು ಮಳೆಯಾಗಿದೆ. ವಾಡಿಕೆ ಮಳೆ 80 ಮಿ.ಮೀ.ನಷ್ಟಿದ್ದು, ವಾಡಿಕೆಗಿಂತ ಶೇ.22 ರಷ್ಟು ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 108 ಮಿ.ಮೀ., ಉತ್ತರ ಒಳನಾಡಿನಲ್ಲಿ 73 ಮಿ.ಮೀ., ಕರಾವಳಿಯಲ್ಲಿ 138 ಮಿ.ಮೀ. ಹಾಗೂ ಮಲೆನಾಡಿನಲ್ಲಿ 127 ಮಿ.ಮೀ.ನಷ್ಟು ಮಳೆಯಾಗಿದ್ದು, ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ಚಾಮರಾಜನಗರ, ಬಾಗಲಕೋಟೆ, ಮಂಡ್ಯ, ಯಾದಗಿರಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾಗಶಃ ವ್ಯಾಪಕ ಮಳೆಯಾಗಿದೆ.
