ಉದಯವಾಹಿನಿ, ಪಾವಗಡ: ತಾಲ್ಲೂಕಿನ ವಳ್ಳೂರು ಗ್ರಾಮದ ಕೆರೆ ಕೋಡಿ ಹರಿದಿದ್ದು, ಸುತ್ತಮುತ್ತಲ ಪ್ರದೇಶದಲ್ಲಿನ ಬೆಳೆ ಹಾಳಾಗಿದೆ.ಹಲವು ದಿನಗಳಿಂದ ಬಿದ್ದ ಮಳೆಯಿಂದಾಗಿ ವಳ್ಳೂರು ಕೆರೆ ತುಂಬಿ ಕೋಡಿ ಬಿದ್ದಿದೆ. ವಳ್ಳೂರಿನಿಂದ ಇಂಟೂರಾಯನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಗ್ರಾಮಸ್ಥರು ಗ್ರಾಮದಿಂದ ಬೇರೆಡೆ ಹೋಗಲಾಗುತ್ತಿಲ್ಲ. ಇತರೆಡೆಗಳಿಂದ ಗ್ರಾಮಕ್ಕೆ ಬರಲಾಗದೆ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.ಕೆರೆ ತುಂಬಿ ಕೋಡಿ ಬಿದ್ದಿರುವುದು ಸಂತಸ ತಂದಿದೆ. ಆದರೆ ಕೆರೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳೆದಿದ್ದ ರಾಗಿ, ಭತ್ತ, ಶೇಂಗಾ, ತೊಗರಿ, ಹತ್ತಿ ಬೆಳೆಗಳು ನೀರಿನಲ್ಲಿ ಮುಳುಗಿ ಸಂಪೂರ್ಣ ಹಾಳಾಗಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಪರಿಹಾರ ಕೊಡಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
