ಉದಯವಾಹಿನಿ, ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರೈತರ ಪರ ನಿಂತರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟುವ, ಜಾತಿ, ಧರ್ಮ ಆಧಾರದಲ್ಲಿ ದೇಶವನ್ನು ಒಡೆಯುವ ಕೆಲಸ ಹಿಂದಿನಿಂದಲೂ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
ಈಗ ಜಮೀರ್ ಅಹಮದ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ರೈತರ ಅನ್ಯಾಯ ಮಾಡುವ ಕೆಲಸ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ಆಗುತ್ತಿದೆ. ರಾಜ್ಯ ಸರ್ಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ರೈತರಿಗೆ ನೋಟೀಸ್ ಕೊಟ್ಟಿರುವುದಕ್ಕೆ ಬಿಜೆಪಿ ಕಾರಣವೇ..? ರೈತರ ಪರ ಬಿಜೆಪಿ ಗಟ್ಟಿಯಾಗಿ ನಿಂತುಕೊಳ್ಳಲಿಲ್ಲ ಅಂದರೆ ರೈತರನ್ನು ಬೀದಿಗೆ ತರುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿತ್ತು. ನಾವು ಕಾನೂನು ಸಹಾಯ ಪಡೆದು ರೈತರ ಪರ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು. ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾಕ್ಕೆ ಪ್ರತಿಕ್ರಿಯಿಸಿದ ಅವುರ, ಈಗ ನೋಡಿದರೆ ಟಾಸ್ಕ್ ಫೋರ್ಸ್ ಮಾಡಿದ್ದೇವೆ ಎಂದು ಆಟ ಆಡುತ್ತಿದ್ದಾರೆ. ಉಪಚುನಾವಣೆ ಇರುವಾಗ ಅವರು ಇದನ್ನು ರಾಜಕೀಯಕರಣಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
