ಉದಯವಾಹಿನಿ, ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಖಾಡಕ್ಕೆ ಇಳಿಯಲಿದ್ದಾರೆ. ನವೆಂಬರ್ 5 ರಿಂದ ಬಹಿರಂಗ ಪ್ರಚಾರ ಮುಗಿಯವವರೆಗೂ ಕ್ಷೇತ್ರದಲ್ಲಿ ಗೌಡರು ಪ್ರಚಾರ ನಡೆಸಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಗೌಡರು ಪ್ರಚಾರ ಕೈಗೊಂಡು ಮತಯಾಚನೆ ಮಾಡಲಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಉತ್ಸಾಹ ತುಂಬಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿರುವ ತಮ ಮೊಮಗ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಗೌಡರು ಚನ್ನಪಟ್ಟಣ ಕ್ಷೇತ್ರದ ಗ್ರಾಮ ಪಂಚಾಯ್ತಿವಾರು ಪ್ರಚಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಇಂದಿನಿಂದ ಗೌಡರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಕಾರ್ಯಕ್ರಮವಿತ್ತು. ಆರೋಗ್ಯ ಕಾರಣಕ್ಕಾಗಿ ಚುನಾವಣಾ ಪ್ರಚಾರವನ್ನು ಮುಂದೂಡಲಾಗಿದೆ.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ನಂತರ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಪ್ರಚಾರದಲ್ಲಿ ನಿರತರಾಗಿದ್ದಾರೆ.
ಆರಂಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಜಿಲ್ಲಾ ಪಂಚಾಯ್ತಿ ಕ್ಷೇತ್ರವಾರು ಪ್ರಚಾರ ನಡೆಸಲಿದ್ದಾರೆ. ಕೆಲವೆಡೆ ಬಹಿರಂಗ ಸಭೆಯಲ್ಲೂ ಮಾತನಾಡಲಿದ್ದಾರೆ. ಚುನಾವಣಾ ಮತದಾನದ ದಿನ ಸಮೀಪಿಸಿದಂತೆ ರೋಡ್ಶೋನಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!