ಉದಯವಾಹಿನಿ, ಕಾರವಾರ: ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದೊಳಗೆ ನಿತ್ಯ ಗೋವಾ ರಾಜ್ಯದ ಖಾಸಗಿ ಬಸ್ ನಿಲುಗಡೆಯಾಗುತ್ತಿದೆ. ಇದಕ್ಕೆ ಹಲವು ಪ್ರಯಾಣಿಕರಿಂದ ಆಕ್ಷೇಪವೂ ವ್ಯಕ್ತವಾಗಿದೆ.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ, ಖಾಸಗಿ ಬಸ್ಗಳಿಗೆ ನಿಲ್ದಾಣದೊಳಗೆ ಖಾಸಗಿ ಬಸ್ ನಿಲುಗಡೆಗೆ ಅವಕಾಶ ನೀಡಿ ನಷ್ಟಕ್ಕೆ ದಾರಿ ಮಾಡಿಕೊಳ್ಳುತ್ತಿದೆ ಎಂಬುದಾಗಿ ಪ್ರಯಾಣಿಕರು ದೂರುತ್ತಿದ್ದಾರೆ.
ಜಿಲ್ಲಾಕೇಂದ್ರವಾಗಿರುವ ಕಾರವಾರದಿಂದ ಪ್ರತಿನಿತ್ಯ ನಸುಕಿನ ಜಾವ ಗೋವಾದ ಕೆಲ ಖಾಸಗಿ ಬಸ್ಗಳು ಕಾಣಕೋಣ, ಮಡಗಾಂವಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಇದೇ ಸಮಯಕ್ಕೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಸಂಚರಿಸುತ್ತಿವೆ. ಸಾರಿಗೆ ಸಂಸ್ಥೆಯ ಬಸ್ ಸಂಚರಿಸುವ ಮುನ್ನ ನಿಲ್ದಾಣದೊಳಕ್ಕೆ ಖಾಸಗಿ ಬಸ್ಗಳು ಪ್ರವೇಶಿಸಿ ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡುತ್ತಿದೆ. ಈ ಮೂಲಕ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಆದಾಯಕ್ಕೆ ಕುತ್ತು ತರುತ್ತಿವೆ ಎಂಬುದಾಗಿ ಹಲವು ಪ್ರಯಾಣಿಕರು ದೂರುತ್ತಿದ್ದಾರೆ.
‘ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯಲ್ಲಿ ಉಚಿತವಾಗಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಥೆಯ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂಬುದಾಗಿ ಅಧಿಕಾರಿಗಳೇ ಹೇಳಿಕೊಳ್ಳುತ್ತಿದ್ದಾರೆ. ಅಂತರ್ ರಾಜ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲದ ಕಾರಣ ಗೋವಾಕ್ಕೆ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್ಗಳಿಗೆ ಹೆಚ್ಚು ಪ್ರಯಾಣಿಕರನ್ನು ಸೆಳೆಯಲು ಅವಕಾಶವಿದೆ. ನಿತ್ಯ ನಸುಕಿನ ಜಾವ ಇಲ್ಲಿಂದ ಗೋವಾಕ್ಕೆ ಉದ್ಯೋಗ ನಿಮಿತ್ತ ಪ್ರಯಾಣಿಸುವವರ ಸಂಖ್ಯೆ ಹೆಚ್ಚಿದೆ. ಈ ಮೂಲಕ ಆದಾಯ ವೃದ್ಧಿಗೆ ಅನುಕೂಲವಾಗುತ್ತದೆ. ಆದರೆ, ಖಾಸಗಿ ಬಸ್ಗಳಿಗೆ ಲಾಭ ಮಾಡಿಕೊಡುವ ಪ್ರಯತ್ನ ನಡೆದಂತಿದೆ’ ಎಂದು ಪ್ರಯಾಣಿಕರೊಬ್ಬರು ಆರೋಪಿಸಿದರು.
