ಉದಯವಾಹಿನಿ, ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲ್ಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಕಡಬ ತಾಲ್ಲೂಕಿನ ಗುಂಡ್ಯದಲ್ಲಿ ಶುಕ್ರವಾರ ಪ್ರತಿಭಟನಾ ಸಭೆ, ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ನಡೆಸಿದರು. ಅರಣ್ಯ ಇಲಾಖೆಯವರು ತಮ್ಮಲ್ಲಿರುವ ಅರಣ್ಯ ಪ್ರದೇಶದಲ್ಲಿ ಗಿಡ ನೆಟ್ಟು ಕಾಡು ಬೆಳೆಸಲಿ. ಅದು ಬಿಟ್ಟು ಕೃಷಿಕರ ಜಮೀನನ್ನು ಪಡೆಯುವ ಕೆಲಸಕ್ಕೆ ಕೈ ಹಾಕುವುದು ಖಂಡನೀಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ, ಗಡಿ ಗುರುತು ಮಾಡುವ ಕೆಲಸ ಮಾಡಲಿ ಎಂದ, ಅವರು ಮುಂದಿನ ಅಧಿವೇಶನದಲ್ಲಿ ಈ ಭಾಗದ ಶಾಸಕರು ಇದರ ವಿರುದ್ಧ ಧ್ವನಿ ಎತ್ತುತ್ತೇವೆ. ಕಸ್ತೂರಿ ರಂಗನ್ ವರದಿ ವಿರುದ್ಧ ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಇಂದು ನಾವು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದು, ಜ.15ರ ಮೊದಲು ಈ ಭಾಗದಲ್ಲಿ ಜಂಟಿ ಸರ್ವೆ ನಡೆಸಿ ಗಡಿ ಗುರುತು ಮಾಡಬೇಕು. ಇಲ್ಲದೆ ಇದ್ದರೆ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.
