ಉದಯವಾಹಿನಿ, ಬೆಂಗಳೂರು: ವೇತನ ಹೆಚ್ಚಳ, ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ರಾಜ್ಯಸರ್ಕಾರ ಕೆಳದ 38 ತಿಂಗಳಿನಿಂದ ಅರಿಯರ್ಸ್ ಹಣ ನೀಡಿಲ್ಲ. ಜನವರಿಯಲ್ಲೇ ಸಂಬಳ ಹೆಚ್ಚಳ ಮಾಡಬೇಕಿತ್ತು. ಆದರೆ ನವೆಂಬರ್ ಬಂದರೂ ಯಾವುದೇ ಸುಳಿವಿಲ್ಲ. ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ನೋಟಿಸ್ ನೀಡುವ ಮೂಲಕ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಮುಂದಿನ ತಿಂಗಳ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಪ್ರಕ್ರಿಯೆಯಂತೆ ಡಿ.9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಗುತ್ತದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.

ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್- 22 ರ ಪ್ರಕಾರ, ಮುಷ್ಕರಕ್ಕೂ ಮುನ್ನ 21 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಈ ಹಿನ್ನೆಲೆಯಲ್ಲಿ ಡಿ.9 ರಂದು ನೋಟಿಸ್ ಕೊಟ್ಟು ಡಿ.31 ರಿಂದ ಸಾರಿಗೆ ಮುಷ್ಕರ ಮಾಡಲು ನಿರ್ಧರಿಸಲಾಗಿದೆ. ಆರು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, ಆ ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.
ಸರ್ಕಾರ ಉಡಾಫೆ ಮಾಡಿದರೆ ಬಸ್ ಸಂಚಾರ ಸ್ಥಗಿತಗೊಳ್ಳಲಿವೆ. ಎಂದು ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಹೇಳಿದ್ದಾರೆ. ಕೆಎಸ್ಆರ್ಟಿಸಿ ಮುಷ್ಕರ ಹೇಗೆ ನಡೆಯುತ್ತದೆ ಎಂಬುದು ನಿಮಗೆ ಗೊತ್ತಿದೆ. ನಮನ್ನು ಕರೆದು ಬೆದರಿಸಿ ಮುಷ್ಕರ ವಾಪಸ್ಸು ಪಡೆಯಲು ಆಗದು. ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಮುಷ್ಕರ ನಿರ್ಧಾರ ಹಿಂಪಡೆಯುತ್ತೇವೆ. ನಮ ಜಂಟಿ ಕ್ರಿಯಾ ಸಮಿತಿಯ ಎಲ್ಲಾ ಸಂಘಟನೆಗಳು ಒಪ್ಪಿಗೆ ಸೂಚಿಸಿವೆ.

 

Leave a Reply

Your email address will not be published. Required fields are marked *

error: Content is protected !!