ಉದಯವಾಹಿನಿ, ಮಸ್ಕಿ: ‘ಪುರಸಭೆ ವ್ಯಾಪ್ತಿಯ ಗಾಂಧಿ ನಗರದ 23ನೇ ವಾರ್ಡ್ ಮನೋರಂಜನೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಮುಂದಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿ ಕಾರ್ಯಕ್ರಮವನ್ನು ರದ್ದು ಮಾಡುವ ಮೂಲಕ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬಡವರ ಆಸೆಗೆ ತಣ್ಣೀರು ಎರಚಿದ್ದಾರೆ’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಆರೋಪಿಸಿದರು. ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ಬಿಜೆಪಿ ನೇತೃತ್ವದಲ್ಲಿ ಸೋಮವಾರ ನಡೆದ ‘ನಮ್ಮ ಭೂಮಿ – ನಮ್ಮ ಹಕ್ಕು’ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ಗಾಂಧಿ ನಗರದ ಏಳು ಎಕರೆ ಪ್ರದೇಶವನ್ನು ಜಮೀನಿನ ಮಾಲೀಕರು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಬಿಟ್ಟು ಕೊಟ್ಟ ಹಿನ್ನೆಲೆಯಲ್ಲಿ ಮಂಡಳಿಯು ಅಲ್ಲಿ ವಾಸಿಸುವ 250ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಕಾರ್ಯಕ್ರಮ ಆಯೋಜಿಸಿತ್ತು. ಆದರೆ, ಸಚಿವ ಜಮೀರ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ, ಇದು ವಕ್ಸ್ ಆಸ್ತಿ ಎಂದು ಹೇಳಿ ಕಾರ್ಯಕ್ರಮ ರದ್ದುಪಡಿಸಿದ್ದಾರೆ’ ಎಂದರು.15 ದಿನಗಳಲ್ಲಿ ವಾರ್ಡ್ ನಿವಾಸಿಗಳಿಗೆ ಹಕ್ಕುಪುತ್ರ ನೀಡದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು. ತಾಲ್ಲೂಕಿನಲ್ಲಿ ರೈತರ ಪಹಣಿಗಳಲ್ಲಿ ವಕ್ಸ್ ಎಂದು ನಮೂದು ಆಗಿರುವ ಬಗ್ಗೆ ದೂರುಗಳು ಬಂದಿವೆ. ಕೂಡಲೇ ಅದನ್ನು ಸರಿಪಡಿಸಿ ರೈತರ ಜಮೀನನ್ನು ರೈತರಿಗೆ ಬಿಟ್ಟುಕೊಡಬೇಕು’ ಎಂದು ಆಗ್ರಹಿಸಿದರು.
