ಉದಯವಾಹಿನಿ, ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಯ ಸಂದರ್ಭವೇ ಉದ್ಭವಿಸಿಲ್ಲ. ಒಂದೇ ಒಂದು ಸ್ಥಾನ ಮಾತ್ರ ಖಾಲಿ ಇದೆ. ಅದನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸಾಧ್ಯಾಸಾಧ್ಯತೆಗಳನ್ನು ಅಲ್ಲಗಳೆದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ತಾವು ಭೇಟಿ ಮಾಡಿ ರಾಜ್ಯದ ಮಹತ್ವದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸುತ್ತೇನೆ. ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪೂರ್ವಾನುಮತಿ ಅಗತ್ಯವಿದೆ. ನಿನ್ನೆ ವನ್ಯಜೀವಿ ಅಭಿವೃದ್ಧಿ ಮಂಡಳಿಗೆ ಪ್ರಧಾನಮಂತ್ರಿ ನರೇಂದ್ರಮೋದಿಯವರೇ ಅಧ್ಯಕ್ಷರಾಗಿದ್ದಾರೆ. ಅವರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ ಎಂದರು.
ತಾವು ಅರಣ್ಯ ಸಚಿವರು ಹಾಗೂ ರಾಜ್ಯದವರಾದಂತಹ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿರುವ ರಾಜ್ಯದ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಸಚಿವರು ನಮಗೆ ಗೌರವ ಕೊಟ್ಟು ಶೀಘ್ರ ಅನುಮತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿ ಕೂಡ ಈ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎಂದು ತಿಳಿಸಿದರು.
ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳು ಸಮಾವೇಶ ನಡೆಸಲು ಮುಂದಾಗಿರುವುದರ ಬಗ್ಗೆ ಸಿದ್ದರಾಮಯ್ಯನವರೇ ನನ್ನ ಬಳಿ ವಿಚಾರ ತಿಳಿಸಿದರು. ಖಾಸಗಿ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು, ಪಕ್ಷದ ವೇದಿಕೆಯಲ್ಲಿ ಕಾರ್ಯಕ್ರಮ ಮಾಡಬೇಕು ಎಂದು ಪಕ್ಷದ ಕೆಲವರು ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಇಂತಹ ವಿಚಾರಗಳಲ್ಲಿ ಪಕ್ಷ ಸಹಜವಾಗಿ ಕಕ್ಕಲಾತಿ(ಪೊಸೆಸಿವ್)ಯಿಂದ ಕೂಡಿರುತ್ತದೆ.
