ಉದಯವಾಹಿನಿ,ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ದೊರೈ ಮುರುಗನ್ ಮೇಕೆದಾಟು ಯೋಜನೆಯನ್ನು ತಮಿಳುನಾಡು ಜನತೆ ಹಾಗೂ ಸರ್ಕಾರ ವಿರೋಧಿಸುವುದಾಗಿ ಪುನರುಚ್ಚರಿಸಿದ್ದಾರೆ.ಅಧೀಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲೇ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಆಶ್ವರ್ಯಕರವೆನಿಸಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ ಎಂದು ಕಾಣುತ್ತದೆ.ನಾನು ಈ ವಿಚಾರದ ಕುರಿತು ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ ಅಲ್ಲಿಯವರೆಗೂ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಭಾವಿಸುತ್ತೇನೆ.ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಅಧಿಕಾರದ ಗದ್ದುಗೆ ಏರಿದ ವಿಚಾರವಾಗಿ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಯೋಜಿಸಿದ್ದೆ. ಈಗ ಅವರ ಆಕ್ರಮಣಕಾರಿ ನಡವಳಿಕೆಯಿಂದ ಪ್ರಕಟಣೆ ಮೂಲಕ ಶುಭಾಶಯವನ್ನು ಕೋರುತ್ತಿದ್ದೇನೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ.
