ಉದಯವಾಹಿನಿ, ಬೆಂಗಳೂರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ, ಸ್ವದೇಶಿ ವಿಜ್ಞಾನ ಆಂದೋಲನ ಮತ್ತು ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಸಹಭಾಗಿತ್ವದಲ್ಲಿ ಡಿಸೆಂಬರ್ ೬ ರಿಂದ ೮ ರವರೆಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ “೧೫ನೇ ರಾಷ್ಟ್ರೀಯ ಮಹಿಳಾ ವಿಜ್ಞಾನ ಸಮ್ಮೇಳನ”ವನ್ನು ಆಯೋಜಿಸಲಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ವೈಜ್ಞಾನಿಕ ಸಮ್ಮೇಳನ ಸಹಕಾರಿಯಾಗಲಿದೆ.
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ತಲುಪಿಸುವ ಗುರಿ ಹೊಂದಲಾಗಿದೆ. ಆಧುನಿಕ ವಿಜ್ಞಾನದ ಜೊತೆಗೆ ಪಾರಂಪರಿಕ ವಿಜ್ಞಾನಗಳಾದ ಮನೋ ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಯೋಗ, ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿ, ಕಲೆ, ಸಾಹಿತ್ಯ ಮತ್ತು ಆಧುನಿಕ ವಿಜ್ಞಾನಗಳನ್ನೊಳಗೊಂಡ ಸ್ವದೇಶಿ ವಿಜ್ಞಾನವನ್ನು ಉತ್ತೇಜಿಸಲು ಈ ವಿಜ್ಞಾನ ಮೇಳವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಸ್ಕೃತ ವಿ.ವಿ. ಕುಲಪತಿ ಡಾ. ಎಸ್. ಅಹಲ್ಯ, ಮಾತೃವೇದಿಕೆ ಸ್ವದೇಶಿ ವಿಜ್ಞಾನ ಆಂದೋಲನದ ಸಂಚಾಲಕರಾದ ಡಾ ವೈ. ಎಸ್. ಗಾಯತ್ರಿರವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸ್ವದೇಶಿ ವಿಜ್ಞಾನ ಆಂದೋಲನ ೨೫ ಜಿಲ್ಲಾ ಘಟಕಗಳನ್ನು ಹೊಂದಿದ್ದು, ಮಹಿಳಾ ವಿಜ್ಞಾನ ಸಮ್ಮೇಳನದಲ್ಲಿ ರಾಜ್ಯದ ವಿಶ್ವವಿದ್ಯಾನಿಲಯ ಮತ್ತು ಪ್ರಾಧ್ಯಾಪಕರು, ಶಿಕ್ಷಕರು, ಸಂಶೋಧನಾ ವಿದ್ಯಾರ್ಥಿಗಳು, ಅನ್ವೇಷಣಾಭಿವೃದ್ಧಿ ಸಂಸ್ಥೆಗಳ ಮಹಿಳಾ ವಿಜ್ಞಾನಿಗಳು ಭಾಗಹಿಸಲಿದ್ದಾರೆ. ಭಾರತರತ್ನ ಸರ್ ಸಿ. ವಿ. ರಾಮನ್ ಮಹಿಳಾ ವಿಜ್ಞಾನ ಪುರಸ್ಕಾರವನ್ನು ನಿರ್ಮಯಿ ಹೆಲ್ಸ್ ಅನಲೆಟಿಕ್ಸ್ ಸಂಸ್ಥೆಯ ಸಂಸ್ಥಾಪಕರಾದ ಡಾ. ಗೀತಾ ಮಂಜುನಾಥ ಮತ್ತು ಮೇಡಂ ಕ್ಯೂರಿ ಮಹಿಳಾ ವಿಜ್ಞಾನ ಪುರಸ್ಕಾರವನ್ನು ಬೆಂಗಳೂರಿನ ನಿಯಾಸ್ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ದೀಪ್ತಿ ನವರತ್ನ ರವರಿಗೆ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
