ಉದಯವಾಹಿನಿ, ಬೆಂಗಳೂರು : ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜಿನ ಆವರಣದ ರಾಜಾಜಿ ಹಾಲ್ನಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕುಲಪತಿಗಳಾದ ಪ್ರೊ. ಲಿಂಗರಾಜ ಗಾಂಧಿ, ಕುಲಸಚಿವ ಟಿ. ಜವರೇಗೌಡ, ಕುಲಸಚಿವ (ಮೌಲ್ಯಮಾಪನ) ಡಾ. ಸಿ.ಎಸ್. ಆನಂದ ಕುಮಾರ್, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಾರ್ಪಣೆ ಮಾಡಿದರು.
ಕುಲಪತಿ ಪ್ರೊ.ಲಿಂಗರಾಜ ಗಾಂಧಿಯವರು ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿವರಿಸಿದರು. ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನ ರಚನೆಯ ರೂವಾರಿಯಾದ ಅಂಬೇಡ್ಕರ್ ರವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದರೆಂದು ಅವರು ಬಣ್ಣಿಸಿದರು. ಕಾನೂನು ಸಚಿವರಾಗಿ, ಕಾರ್ಮಿಕ ಸಚಿವರಾಗಿ ಮಹತ್ವದ ಸುಧಾರಣೆಗಳನ್ನು ಜಾರಿಗೆ ತರುವ ಜೊತೆಗೆ ದೀನದಲಿತರ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರೆಂದು ವಿವರಿಸಿದರು.ಅಸ್ಪೃಶ್ಯತೆ ಮತ್ತು ಸಾಮಾಜಿಕ ಶೋಷಣೆಯ ನಿವಾರಣೆಗೆ ಕಂಕಣಬದ್ಧರಾಗಿ ಹೋರಾಡಿದ ಅಂಬೇಡ್ಕರ್ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದರೆಂದು ಪ್ರೊ. ಗಾಂಧಿ ಪ್ರತಿಪಾದಿಸಿದರು.
ವಿಶ್ವವಿದ್ಯಾನಿಲಯದ ವಿವಿಧ ನಿಕಾಯಗಳ ಡೀನರು, ವಿಭಾಗ ಮುಖ್ಯಸ್ಥರು, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
